ನವದೆಹಲಿ : 'ಅಕ್ರಮ ಶಸ್ತ್ರಾಸ್ತ್ರ ಮಾರಾಟ' ದಂಧೆಯಲ್ಲಿ ಭಾಗಿಯಾಗಿರುವ ಕೆಲವು ಸೇನಾ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದೇ ಇರುವುದಕ್ಕೆ ಭಾರತೀಯ ಸೇನೆ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ ಕಾರಿದೆ.
ಸೇನೆಗೆ ಸೇರಿದ ಶಸ್ತ್ರಾಸ್ತ್ರಗಳನ್ನು ಅಕ್ರಮವಾಗಿ ಮಾರಾಟ ಮಾಡುವ ಜಾಲದಲ್ಲಿ ಸೇನೆಯ ಉನ್ನತಮಟ್ಟದ ಅಧಿಕಾರಿಗಳೇ ಭಾಗಿಯಾಗಿದ್ದಾರೆ ಎಂದು ಸುಪ್ರೀಂ ಕೋರ್ಟ್ ಗೆ ಪಿ.ಐ.ಎಲ್ ಸಲ್ಲಿಸಲಾಗಿತ್ತು. ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ, ಈ ಪ್ರಕರಣ ತಮ್ಮ ಆತ್ಮಸಾಕ್ಷಿಗೆ ಆಘಾತ ಉಂಟುಮಾಡಿದೆ ಎಂದು ಹೇಳಿದೆ. ಅಕ್ರಮ ಶಸ್ತ್ರಾಸ್ತ್ರ ಮಾರಾಟ ಮಾಡುವವರ ವಿರುದ್ಧ ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಕ್ರಮ, 'ಕಣ್ಣೊರೆಸುವ ತಂತ್ರ' ದಂತಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಮದ್ಯ ಸೇವಿಸಿ ಗದ್ದಲ ಮಾಡಿದರೆ ಸೇನಾ ಸಿಬ್ಬಂದಿಗಳನ್ನು ಸೇವೆಯಿಂದ ವಜಾಗೊಳಿಸುತ್ತೀರಿ ಆದರೆ ಸೇನೆಯಲ್ಲಿರುವ ಹಿರಿಯ ಅಧಿಕಾರಿಗಳೇ ಅಕ್ರಮ ಶಸ್ತ್ರಾಸ್ತ್ರ ಮಾರಾಟ ಮಾಡುತ್ತಿದ್ದರೂ ಅವರ ವಿರುದ್ಧ ಏಕೆ ಕ್ರಮ ಕೈಗೊಳ್ಳುವುದಿಲ್ಲ ಎಂದು ಅಟಾರ್ನಿ ಜನರಲ್ ಮುಕುಲ್ ರೋಹಟ್ಗಿ ಅವರನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಭಾರತೀಯ ಸೇನೆ ಶಿಸ್ತಿಗೆ ಮಾದರಿಯಾಗಿರಬೇಕು ಆದರೆ ಇಲ್ಲಿನ ಅಧಿಕಾರಿಗಳೇ ಅಕ್ರಮ ಶಸ್ತ್ರಾಸ್ತ್ರ ಮಾರಾಟದಲ್ಲಿ ತೊಡಗಿದ್ದಾರೆ ಎಂದು ಸುಪ್ರೀಂ ಅಸಮಾಧಾನ ವ್ಯಕ್ತಪಡಿಸಿದೆ.
ಪ್ರಕರಣದ ಬಗ್ಗೆ ಕೇಂದ್ರ ಸರ್ಕಾರ 2 ವಾರಗಳಲ್ಲಿ ಉತ್ತರಿಸಬೇಕೆಂದು ಸುಪ್ರೀಂ ಕೋರ್ಟ್ ತಾಕೀತು ಮಾಡಿದೆ. ಪ್ರಕರಣದ ವಿಚಾರಣೆಯನ್ನು ಸೆ.15ಕ್ಕೆ ಮುಂದೂಡಿದೆ. ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವವರು, ನಿವೃತ್ತ ಸೇನಾಧಿಕಾರಿಗಳು ಅಕ್ರಮ ಶಸ್ತ್ರಾಸ್ತ್ರ ಮಾರಾಟ ಮಾಡುತ್ತಿದ್ದಾರೆ ಎಂದು ಪಿ.ಐ.ಎಲ್ ನಲ್ಲಿ ಆರೋಪ ಮಾಡಲಾಗಿತ್ತು.