ಬೆಂಗಳೂರು : ಕಳೆದ ಲೋಕಸಭಾ ಚುನಾವಣೆಯ ಬಳಿಕ ಇದೇ ಮೊದಲ ಬಾರಿಗೆ ರಾಜ್ಯ ಬಿಜೆಪಿ ಸಂಸದರ ಸಭೆ ನಡೆಯುತ್ತಿದ್ದು, ಬೆಂಗಳೂರಿನ ಪಕ್ಷದ ಕೇಂದ್ರ ಕಛೇರಿಯಲ್ಲಿ ಸಭೆ ಆರಂಭವಾಗಿದೆ.
ರಾಜ್ಯಧ್ಯಕ್ಷ ಪ್ರಹ್ಲಾದ್ ಜೋಷಿ ನೇತೃತ್ವದಲ್ಲಿ ಬೆಳಿಗ್ಗೆ 10:30ಕ್ಕೆ ಆರಂಭವಾದ ಸಭೆ ಸಂಜೆವರೆಗೂ ನಡೆಯಲಿದೆ. ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಕೇಂದ್ರ ಸಚಿವರಾದ ಅನಂತ್ ಕುಮಾರ್, ಸದಾನಂದಗೌಡ, ಸಂಸದ ಜಿ.ಎಂ.ಸಿದ್ದೇಶ್ವರ್ ಮೊದಲಾದವರು ಪಾಲ್ಗೊಂಡಿದ್ದಾರೆ.
ಸಭೆಗೂ ಮುನ್ನ ಮಾತನಾಡಿದ ಪ್ರಹ್ಲಾದ್ ಜೋಷಿ, ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ, ರಾಜ್ಯದಲ್ಲಿ ಪಕ್ಷ ಸಂಘಟನೆ, ಕೇಂದ್ರದ ಬ್ಯಾಂಕ್ ಖಾತೆ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಎಲ್ಲಾ ರಾಜ್ಯಗಳಲ್ಲೂ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರ ಸಭೆ ನಡೆಸಬೇಕು ಎಂಬ ಪಕ್ಷದ ವರಿಷ್ಠರ ಸಲಹೆ ಮೇರೆಗೆ ಬಿಜೆಪಿ ಸಂಸದರ ಸಭೆ ನಡೆಸಲಾಗುತ್ತಿದ್ದು, ಪಕ್ಷ ಸಂಘಟನೆ ಜತೆಗೆ ಕೇಂದ್ರದಿಂದ ರಾಜ್ಯಕ್ಕೆ ಪಡೆಯಬೇಕಾಗಿರುವ ಪ್ರಮುಖ ಯೋಜನೆಗಳ ನೆರವಿನ ಬಗ್ಗೆ ಸಮಾಲೋಚನೆ ನಡೆಸುವ ಉದ್ದೇಶಹೊಂದಲಾಗಿದೆ.