ಶ್ರೀನಗರ : ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಕಾಣಿಸಿಕೊಂಡಿರುವ ಭೀಕರ ಪ್ರವಾಹ ಪರಿಸ್ಥಿತಿ ಇನ್ನೂ ಮುಂದುವರೆದಿದೆ. ಲಕ್ಷಾಂತರ ಜನರು ವಿವಿಧ ಪ್ರದೇಶಗಳಲ್ಲಿ ಸಿಲುಕಿಕೊಂಡಿದ್ದಾರೆ.
ರಾಜಧಾನಿ ಶ್ರೀನಗರ , ದೇಶದ ಉಳಿದ ಭಾಗಗಳೊಂದಿಗೆ ಸಂಪರ್ಕ ಕಳೆದುಕೊಂಡಿದ್ದು, ಪರಿಸ್ಥಿತಿ ಬಿಗಡಾಯಿಸಿದೆ. ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಇನ್ನಷ್ಟು ಸಿಬ್ಬಂದಿಗಳನ್ನು ರವಾನಿಸಿದೆ.
ಇದುವರೆಗೆ ಸೇನೆ, ವಾಯುಪಡೆ ಮತ್ತು ಎನ್.ಡಿ.ಆರ್.ಎಫ್ ಸಿಬ್ಬಂದಿ ಒಟ್ಟು 25 ಸಾವಿರಕ್ಕೂ ಹೆಚ್ಚು ಜನರನ್ನು ರಕ್ಷಿಸಿದ್ದಾರೆ. ಹಲವೆಡೆ ರಕ್ಷಣಾ ಕಾರ್ಯ ಕಷ್ಟಕರವಾಗಿದ್ದರಿಂದ ಜನರು ಪರದಾಡುತ್ತಿದ್ದಾರೆ.
ಉಧಂಪುರ ಜಿಲ್ಲೆಯ ಪಂಚೇರಿಯಲ್ಲಿ ಭೂ ಕುಸಿತ ಸಂಭವಿಸಿದ್ದು 27 ಜನರು ಸಾವನ್ನಪ್ಪಿದ್ದಾರೆ. ಇರಿಂದ ರಾಜ್ಯದಲ್ಲಿ ಪ್ರವಾಹಕ್ಕೆ ಬಲಿಯಾದವರ ಸಂಖ್ಯೆ 200ಕ್ಕೆ ಏರಿಕೆಯಾಗಿದೆ.
ಶ್ರೀನಗರದಲ್ಲಿ ಬಹುತೇಕ ವಸತಿ ಪ್ರದೇಶಗಳಲ್ಲಿ ಭಾರೀ ಪ್ರಮಾಣದಲ್ಲಿ ನೀರು ನುಗ್ಗಿದ್ದು, ಜನರು ಮನೆಯ ಚಾವಣಿಯ ಮೇಲೇರಿ ಕುಳಿತು ಜೀವ ರಕ್ಷಣೆಗಾಗಿ ಮೊರೆಯಿಡುತ್ತಿದ್ದಾರೆ.
45 ವಿಮಾನಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದು, 60 ಸೇನೆ ಹಾಗೂ ವೈದ್ಯಕೀಯ ತಂಡಗಳು ಬೀಡು ಬಿಟ್ಟಿವೆ.
ಈ ನಡುವೆ ಜಮ್ಮು-ಕಾಶ್ಮೀರಕ್ಕೆ ಪ್ರವಾಸಕ್ಕಾಗಿ ತೆರಳಿದ 12ಕ್ಕೂ ಹೆಚ್ಚು ಕರ್ನಾಟಕದವರು ಪ್ರವಾಹದಲ್ಲಿ ಸಿಲುಕಿದ್ದು, ದೂರವಾಣಿ ಸಂಪರ್ಕಕ್ಕೂ ಸಿಗುತ್ತಿಲ್ಲ. ಅಲ್ಲದೇ 8 ಜನ ಹಿರಿಯ ನಗರಿಕರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.