ಕೋಲ್ಕತ್ತಾ : ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಸೆ.9ರಂದು ಸಿಬಿಐ ಅಧಿಕಾರಿಗಳು ಪಶ್ಚಿಮ ಬಂಗಾಳದ ನಿವೃತ್ತ ಡಿ.ಐ.ಜಿ ರಜತ್ ಮಜುಂದಾರ್ ಅವರನ್ನು ಬಂಧಿಸಿದ್ದಾರೆ.
ಶಾರದಾ ಚಿಟ್ ಫಂಡ್ ಸಂಸ್ಥೆಗೆ ರಜತ್ ಮಜುಂದಾರ್ ಅವರು ಭದ್ರತಾ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಪಶ್ಚಿಮ ಬಂಗಾಳದಲ್ಲಿರುವ ರಜತ್ ಮಜುಂದಾರ್ ಅವರ ನಿವಾಸದ ಮೇಲೆ ದಾಳಿ ನಡೆಸಿ ಮಜುಂದಾರ್ ಅವರನ್ನು ಬಂಧಿಸಿ ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ.
ಪಶ್ಚಿಮ ಬಂಗಾಳದ ಶಾರದಾ ಚಿಟ್ ಫಂಡ್ ಒಡಿಶಾ, ಅಸ್ಸಾಂ ರಾಜ್ಯಗಳ ಲಕ್ಷಾಂತರ ಜನರಿಗೆ 25,000 ಕೋಟಿ ರೂ ವಂಚನೆ ಮಾಡಿದ್ದು, ಈ ಹಗರಣದಲ್ಲಿ ಹಲವು ರಾಜಕೀಯ ನಾಯಕರು ಭಾಗಿಯಾಗಿರುವ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಸುಪ್ರೀಂ ಕೋರ್ಟ್ ಸಿಬಿಐ ತನಿಖೆಗೆ ಸೂಚಿಸಿದ್ದು ಸಿಬಿಐ ಅಧಿಕಾರಿಗಳು ಹಗರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಬಹುಕೋಟಿ ಹಗರಣದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಆಪ್ತವಲಯದಲ್ಲಿದ್ದ ತೃಣಮೂಲ ಕಾಂಗ್ರೆಸ್ ಸಂಸದ ಕುನಾಲ್ ಘೋಷ್ ಸೇರಿದಂತೆ ಹಲವು ಪ್ರಭಾವಿಗಳ ಹೆಸರು ಕೇಳಿಬಂದಿದೆ.