ಬೆಂಗಳೂರು : ನಗರ ಪ್ರದೇಶಗಳಲ್ಲಿ ಪ್ರತಿ ಮನೆಗೂ ಅಡುಗೆ ಅನಿಲ ಸಂಪರ್ಕ ಕಲ್ಪಿಸಲಾಗುವುದು ಎಂದು ರಾಸಾಯನಿಕ, ರಸಗೊಬ್ಬರ ಖಾತೆ ಸಚಿವ ಅನಂತ್ ಕುಮಾರ್ ಭರವಸೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯುಪಿಎ ಸರ್ಕಾರದ ಅವಧಿಯಲ್ಲಿ ಅಡುಗೆ ಅನಿಲ ಸಮಸ್ಯೆ ಉಂಟಾಗಿತ್ತು. ಎನ್.ಡಿ.ಎ ಸರ್ಕಾರ ಬಂದ ಮೇಲೆ ಅಡಿಗೆ ಅನಿಲ ಸಿಲಿಂಡರ್ ಸಂಖ್ಯೆಯನ್ನು 12ಕ್ಕೆ ಏರಿಕೆ ಮಾಡಲಾಗಿದೆ. ಪ್ರತಿ ಮನೆಗೂ ಸಿಲಿಂಡರ್ ಸಂಪರ್ಕ ಕಲಿಸುವ ಉದ್ದೇಶ ಹೊಂದಲಾಗಿದೆ ಎಂದರು.
ಎನ್.ಡಿ.ಎ ಸರ್ಕಾರ ಅಧಿಕಾರಕ್ಕೆ ಬಂದು ನೂರು ದಿನಗಳಲ್ಲೇ ಪೆಟ್ರೋಲ್ ಬೆಲೆ ಮೂರು ಬಾರಿ ಇಳಿಕೆ ಮಾಡಲಾಗಿದೆ. ಬಡವರಿಗಾಗಿ ಆರಂಭಿಸಲಾಗಿರುವ ಜನ್ ಧನ್ ಯೋಜನೆಯಡಿ 3.12 ಕೋಟಿ ಬ್ಯಾಂಕ್ ಖಾತೆ ತೆರೆಯಲಾಗಿದೆ ಎಂದು ತಿಳಿಸಿದರು.
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ನಡೆಸಿದ 10 ವರ್ಷದ ಆಡಳಿತ ಅವಧಿಯಲ್ಲಿ ಸಿಗದ ಅಂತರಾಷ್ಟ್ರೀಯ ಮನ್ನಣೆ ನೂರು ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಿಗುತ್ತಿದೆ ಎಂದರು.
ಸೆ.25ರಂದು ಪ್ರಧಾನಿ ಮೋದಿ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದು, ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರನ್ನು ಭೇಟಿಯಾಗಲಿದ್ದಾರೆ. ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡಲಿದ್ದಾರೆ. ಅದಕ್ಕೂ ಮುನ್ನ ಸೆ.23 ಹಾಗೂ 24ರಂದು ರಾಜ್ಯ ಪ್ರವಾಸ ಮಾಡಲಿದ್ದು, ಪ್ರಧಾನಿ ಮೋದಿ ಸ್ವಾಗತಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.