ಮೈಸೂರು : ರಾಜವಂಶಸ್ಥೆ ಪ್ರಮೋದಾದೇವಿ ಹಾಗೂ ಸರ್ಕಾರದ ನಡುವಿನ ಶೀತಲ ಸಮರ ದಸರಾ ಅಂಗವಾಗಿ ನಡೆಯಬೇಕಿರುವ ಸಾಂಸ್ಕೃತಿಕ ಕಾರ್ಯಕ್ರಮಗಳ ಮೇಲೆ ಗಂಭೀರ ಪರಿಣಾಮ ಬೀರಿದೆ.
ಅರಮನೆ ಮುಂಭಾಗದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿತ್ತು. ಆದರೆ ಮೈಸೂರು ಮಹಾರಾಜ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ನಿಧನರಾಗಿ ಒಂದು ವರ್ಷ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಅರಮನೆ ಮುಂಭಾಗದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸುವುದಕ್ಕೆ ಪ್ರಮೋದಾದೇವಿ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.
ಮಹಾರಾಣಿ ಅವರಿಂದ ಆಕ್ಷೇಪ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಅರಮನೆ ಮುಂಭಾಗದಲ್ಲಿ ನಡೆಯುತ್ತಿದ್ದ ಕಾಮಗಾರಿಗಳು ಹಟಾತ್ ಸ್ಥಗಿತಗೊಂಡಿದೆ. ಈ ಹಿನ್ನೆಲೆಯಲ್ಲಿ ದಸರಾ ಅಂಗವಾಗಿ ನಡೆಯಬೇಕಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವುದು ಬಹುತೇಕ ಅನುಮಾನವಾಗಿದೆ.
ಈ ಹಿಂದೆ ಪ್ರಮೋದಾ ದೇವಿ ಅವರು ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಪ್ರತಿಕ್ರಿಯಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಶ್ರೀನಿವಾಸ ಪ್ರಸಾದ್ ಅರಮನೆ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವುದು ಖಂಡಿತಾ. ಈ ಕುರಿತು ಪ್ರಮೋದಾದೇವಿ ಅವರ ಮನವೊಲಿಸುತ್ತೇವೆ ಎಂದಿದ್ದರು. ಆದರೆ ಈ ವರೆಗೂ ಅರಮನೆ ಮುಂಭಾಗದಲ್ಲಿ ವೇದಿಕೆ ಇನ್ನೂ ಸಿದ್ಧವಾಗಿಲ್ಲ. ಈ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುವುದು ಅನುಮಾನವೆಂದು ಖಾಸಗಿ ಸುದ್ದಿ ವಾಹಿನಿಯೊಂದು ವರದಿ ಪ್ರಸಾರ ಮಾಡಿದೆ.