BW News Bureau : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಭಜನೆ ಕುರಿತಂತೆ ನಿವೃತ್ತ ಮುಖ್ಯ ಕಾರ್ಯದರ್ಶಿ ಬಿ.ಎಸ್.ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ತ್ರಿ-ಸದಸ್ಯರ ತಜ್ಞರ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಿವೃತ್ತ ಆಯುಕ್ತ ಸಿದ್ದಯ್ಯ ಹಾಗೂ ಹಿಂದಿನ ಬೆಂಗಳೂರು ಅಜೆಂಡಾ ಟಾಸ್ಕ್ ಪೋರ್ಸ್ನ ಸದಸ್ಯರಾಗಿದ್ದ ರವಿಚಂದರ್ ಅವರು ಈ ತಜ್ಞರ ಸಮಿತಿಯ ಇತರೆ ಸದಸ್ಯರಾಗಿದ್ದಾರೆ.
ಅಲ್ಲದೆ, ಈ ತಜ್ಞರ ಸಮಿತಿಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಒದಗಿಸುವಂತೆ ಬಿಬಿಎಂಪಿಯ ಆಡಳಿತ ವಿಭಾಗದ ಅಪರ ಆಯುಕ್ತರಿಗೆ ಸೂಚಿಸಲಾಗಿದೆ. ಅಂತೆಯೇ, ಸಮಿತಿಯ ಸುಗಮ ಕಾರ್ಯನಿರ್ವಹಣೆಗಾಗಿ ಅಗತ್ಯವಿರುವ ಕಚೇರಿ, ಸಿಬ್ಬಂದಿ, ಪೀಠೋಪಕರಣಗಳು, ವಾಹನ ಸೌಲಭ್ಯ ಹಾಗೂ ಅವಶ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸುವಂತೆ ಪಾಲಿಕೆಯ ಆಯುಕ್ತರಿಗೆ ಆದೇಶಿಸಲಾಗಿದೆ.
ಪಾಲಿಕೆ ವಿಭಜನೆಯ ಪ್ರಸ್ತಾವನೆಯನ್ನು ಕೂಲಂಕುಷವಾಗಿ ಅಧ್ಯಯನ ಮಾಡಿ ಮೂರು ತಿಂಗಳೊಳಗಾಗಿ ವರದಿ ಸಲ್ಲಿಸುವಂತೆ ಸಮಿತಿಗೆ ತಿಳಿಸಲಾಗಿದೆ.