ಚೆನ್ನೈ : ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಸಾಬೀತಾಗಿದ್ದು, ಜಯಲಲಿತಾ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡುತ್ತಿದ್ದಂತೆಯೇ ಎಐಎಡಿಎಂಕೆ ಕಾರ್ಯಕರ್ತರ ಆಕ್ರೋಶ ಮುಗಿಲು ಮುಟ್ಟಿದೆ. ಇನ್ನೊಂದೆಡೆ ಡಿಎಂಕೆ ಕಾರ್ಯಕರ್ತರು ಸಂಭ್ರಮ ಆಚರಿಸಿದ್ದಾರೆ.
ತೀರ್ಪು ಹೊರಬೀಳುತ್ತಿದ್ದಂತೆಯೇ ಎಐಎಡಿಎಂಕೆ ಕಾರ್ಯಕರ್ತರು ಡಿಎಂಕೆ ಮುಖ್ಯಸ್ಥ ಕರುಣಾನಿಧಿಯವರ ಚೆನ್ನೈ ನಿವಾಸದ ಬಳಿ, ಕರುಣಾನಿಧಿ ಪ್ರತಿಕೃತಿ ದಹಿಸಿ, ಜಯಲಲಿತಾ ಪರ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಜಯಲಲಿತಾ ವಿರುದ್ಧ ದೂರು ನೀಡಿದ್ದ ಬಿಜೆಪಿ ಮುಖಂಡ ಸುಬ್ರಹ್ಮಣ್ಯನ್ ಸ್ವಾಮಿ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೊಂದೆಡೆ ಹಲವಾರು ಮಹಿಳೆಯರು ಜಯಲಲಿತಾ ಅವರ ನಿವಾಸದ ಎದುರು ಕುಳಿತು ಕಣ್ಣೀರಿಡುತ್ತಿದ್ದು, ಜಯಲಲಿತಾ ಬರುವವರೆಗೂ ವಾಪಸ್ ಹೋಗುವುದಿಲ್ಲ ಎಂದು ಪಟ್ಟುಹಿಡಿದು ಕುಳಿತಿದ್ದಾರೆ.
ತಮಿಳುನಾಡಿನಾದ್ಯಂತ ಅಘೋಷಿತ ವಾತಾವರಣ ನಿರ್ಮಾಣವಾಗಿದ್ದು, ಮಾಲಿಕರುಗಳು ಅಂಗಡಿ ಮುಂಗಟ್ಟುಗಳನ್ನು ಮುಚ್ಚುತ್ತಿದ್ದು, ಸ್ವಯಂ ಘೋಷಿತ ಬಂದ್ ವಾತಾವರಣ ನಿರ್ಮಾಣವಾಗಿದೆ. ವಾಹನ ಸಂಚಾರ ಕೂಡ ವಿರಳವಾಗಿದೆ.
ಜಯಲಲಿತಾ ಬೆಂಬಲಿಗರು ಹಲವೆಡೆ ರಸ್ತೆ ತಡೆ ನಡೆಸಿದ್ದು, ಪ್ರತಿಭಟನೆಗಳು ತೀವ್ರ ಸ್ವರೂಪಡೆದುಕೊಳ್ಳುತ್ತಿವೆ. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ಈ ನಡುವೆ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಯಲಲಿತಾ ವಿರುದ್ಧ ತೀರ್ಪು ಬಂದ ಬಳಿಕ ಡಿಎಂಕೆ ಕಾರ್ಯಕರ್ತರು ತಮಿಳುನಾಡಿನಾದ್ಯಂತ ಸಂಭ್ರಮಾಚರಣೆ ನಡೆಸಿದ್ದಾರೆ.