BW News Bureau : ಮುಂದಿನ ಎರಡು ತಿಂಗಳಲ್ಲಿ ಬೆಂಗಳೂರು ನಗರದ ಎಲ್ಲಾ ಆಸ್ತಿಗಳ ಮರು ಸರ್ವೇಕ್ಷಣಾ ಕಾರ್ಯ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬಿಬಿಎಂಪಿ ಕಾರ್ಯಚಟುವಟಿಕೆಗಳ ಪ್ರಗತಿ ಪರಿಶೀಲನೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು ನಗರದಲ್ಲಿ ಪ್ರಸ್ತುತ 16 ಲಕ್ಷ ಆಸ್ತಿಗಳನ್ನು ಗುರುತಿಸಲಾಗಿದೆ. ಆದರೆ, ಎರಡು ಲಕ್ಷ ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗೆ ಉಳಿದಿದೆ.ಈ ಹಿನ್ನೆಲೆಯಲ್ಲಿ ಆಸ್ತಿಗಳ ಮರು ಸರ್ವೇಕ್ಷಣಾ ಕಾರ್ಯಕ್ಕೆ ಚಾಲನೆ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ತೆರಿಗೆ ಸಂಗ್ರಹಣೆಯಲ್ಲಿ ಗುರಿ ಸಾಧನೆ ಮಾಡದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಈ ಹಿಂದೆ ನೀಡಲಾಗಿದ್ದ ತೆರಿಗೆ ಸಂಗ್ರಹ ಗುರಿಯನ್ನು ಪರಿಷ್ಕರಿಸಲಾಗಿದೆ.
ಪಾಲಿಕೆಗೆ ಈ ಮೊದಲು ಎಂಟು ವಲಯಗಳಿಂದ 2500 ಕೋಟಿ ರೂ ತೆರಿಗೆ ಸಂಗ್ರಹಿಸುವ ಗುರಿ ನೀಡಲಾಗಿತ್ತು. ಇದೀಗ ಅದನ್ನು 2900 ಕೋಟಿ ರೂ ಗಳಿಗೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.
ಪಾಲಿಕೆ ಈಗಾಗಲೇ 1260 ಕೋಟಿ ರೂ ಸಂಗ್ರಹಿಸಿದೆ. ಕೆಲವು ವಲಯಗಳಲ್ಲಿ ಸಿಬ್ಬಂದಿ ಕೊರತೆ ತೆರಿಗೆ ಸಂಗ್ರಹಕ್ಕೆ ತೊಡಕಾಗಿ ಪರಿಣಮಿಸಿದೆ. ಆದ್ದರಿಂದ, ಹೆಚ್ಚುವರಿ ಸಿಬ್ಬಂದಿ ನೇಮಕ ಮಾಡಿಕೊಳ್ಳಲು ಸೂಚಿಸಲಾಗಿದೆ. ಪ್ರಮುಖವಾಗಿ ಖಾಲಿ ನಿವೇಶನಗಳು ಮತ್ತು ಬಿ ಖಾತೆ ಆಸ್ತಿದಾರರಿಂದಲೂ ತೆರಿಗೆ ವಸೂಲಿಗೆ ಆದೇಶಿಸಲಾಗಿದೆ. ಬಿ ಖಾತೆದಾರರು ರಸ್ತೆ, ನೀರು, ವಿದ್ಯುತ್ ಮತ್ತಿತರ ಸೌಲಭ್ಯಗಳನ್ನು ಪಡೆಯುತ್ತಿರುವ ಹಿನ್ನೆಲೆಯಲ್ಲಿ ಅವರೂ ತೆರಿಗೆ ಪಾವತಿಸಬೇಕಾಗುತ್ತದೆ ಎಂದು ಹೇಳಿದರು.