ಲಖ್ನೌ : 'ರಾಮಮಂದಿರ' ನಿರ್ಮಾಣ ಮಾಡಲು ಬಿಜೆಪಿ ಸರ್ಕಾರಕ್ಕೆ 2019ರವರೆಗೂ ಕಾಲಾವಕಾಶವಿದೆ ಎಂದು ಆರ್.ಎಸ್.ಎಸ್ ನ ಜಂಟಿ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ತಿಳಿಸಿದ್ದಾರೆ.
ಲಖ್ನೌದಲ್ಲಿ ನಡೆಯುತ್ತಿರುವ ಆರ್.ಎಸ್.ಎಸ್ ನ ಅಖಿಲ ಭಾರತೀಯ ಕಾರ್ಯಕಾರಿಣಿ ಮಂಡಲ ಸಭೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣ ರಾಷ್ಟ್ರೀಯ ಹಿತಾಸಕ್ತಿ ವಿಷಯವಾಗಿದೆ. ಕೇಂದ್ರ ಸರ್ಕಾರಕ್ಕೆ ತನ್ನದೇ ಆದ ಅದ್ಯತೆಗಳಿದ್ದು, ರಾಮಮಂದಿರ ನಿರ್ಮಾಣಕ್ಕೆ 2019ರವರೆಗೆ ಅವಕಾಶವಿದೆ ಎಂದು ತಿಳಿಸಿದ್ದಾರೆ. ಇದೇ ವೇಳೆ ರಾಮಮಂದಿರ ನಿರ್ಮಾಣ ಸಂಬಂಧ ವಿ.ಹೆಚ್.ಪಿ ಸೆರಿದಂತೆ ಧಾರ್ಮಿಕ ಸಂಘಟನೆಗಳಿಗೆ ಬೆಂಬಲ ನೀಡುತ್ತೇವೆ ಎಂದಿದ್ದಾರೆ.
ಕೇಂದ್ರದಲ್ಲಿ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಿದರೆ ರಾಮಮಂದಿರ ನಿರ್ಮಾಣ ಮಾಡುತ್ತೇವೆ ಎಂದು ಭರವಸೆ ನೀಡಿದ್ದರ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ದತ್ತಾತ್ರೇಯ ಹೊಸಬಾಳೆ, ರಾಮಮಂದಿರ ನಿರ್ಮಾಣ ಬಿಜೆಪಿ ಚುನಾವಣಾ ಪ್ರಣಾಳಿಕೆ ವಿಷಯವಾಗಿತ್ತು. ಬಿಜೆಪಿ ಪ್ರಣಾಳಿಕೆಯ ಅಂಶವನ್ನು ಈಡೇರಿಸಲಿರುವುದಾಗಿ ಭರವಸೆ ನೀಡಿದ್ದಾರೆ.
ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಕಾರ್ಯಕಾರಿಣಿ ಮಂಡಲ ಸಭೆಯಲ್ಲಿ ಪ್ರಸ್ತಾಪಿಸಲಾಗುವುದು ಎಂದು ಭಾರತಕ್ಕೆ ಅಲ್-ಖೈದಾ, ಐ.ಎಸ್.ಐ.ಎಸ್ ಉಗ್ರ ಸಂಘಟನೆಗಳಿಂದ ಅಪಾಯವಿರುವುದರ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ದತ್ತಾತ್ರೇಯ ಹೊಸಬಾಳೆ ಉತ್ತರಿಸಿದ್ದಾರೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಕಾರ್ಯಕಾರಿಣಿ ಮಂಡಲ ಸಭೆಗೆ ವಿಶೇಷ ಆಹ್ವಾನಿತರಾಗಿದ್ದು ಇಂದಿನ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.