ಬೆಂಗಳೂರು : ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ 21ದಿಗಳಿಂದ ಜೈಲುವಾಸ ಅನುಭವಿಸುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಬಿಡುಗಡೆ ಹಿನ್ನಲೆಯಲ್ಲಿ ಪರಪ್ಪನ ಅಗ್ರಹಾರದ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ಸುಪ್ರೀಂ ಕೋರ್ಟ್ ನಿಂದ ಜಾಮೀನು ದೊರೆತ ಹಿನ್ನಲೆಯಲ್ಲಿ ಅ.18ರಂದು ಜಯಲಲಿತಾ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಜಯಲಲಿತಾ ಬಿಡುಗಡೆ ಹಿನ್ನಲೆಯಲ್ಲಿ ಅವರ ಅಭಿಮಾನಿಗಳು ಹಾಗೂ ಎಐಎಡಿಎಂಕೆ ಕಾರ್ಯಕರ್ತರು ಈಗಾಗಲೇ ರಾಜ್ಯಕ್ಕೆ ಆಗಮಿಸುತ್ತಿದ್ದು, ಮುಂಜಾಗೃತಾ ಕ್ರಮವಾಗಿ ಪರಪ್ಪನ ಅಗ್ರಹಾರ ಜೈಲಿನ 1 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ನೆ ಜಾರಿಗೊಳಿಸಲಾಗಿದೆ.
ಭದ್ರತೆಗಾಗಿ 6 ಡಿಸಿಪಿ,15ಎಸಿಪಿ,45 ಇನ್ಸ್ ಪೆಕ್ಟರ್, 20ಕೆ ಎಸ್ ಆರ್ ಪಿ, 20 ಸಿಎ ಆರ್ ತುಕಡಿಗಳು, 10 ಬಿಎಂ ಟಿಸಿ ಬಸ್ ಹಾಗೂ ಒಂದೂವರೆ ಸಾವಿರಕ್ಕೂ ಹೆಚ್ಚು ಪೊಲೀಸ್ ಪೇದೆಗಳನ್ನು ನಿಯೋಜಿಸಲಾಗಿದೆ.
ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಪರಪ್ಪನ ಅಗ್ರಹಾರದ ಸುತ್ತ ಪರಿಶೀಲನೆ ನಡೆಸಿದ್ದು, ಜಯಲಲಿತಾ ಭದ್ರತೆಗಾಗಿ ಎಸ್ಕಾರ್ಟ್ ವಾಹನ ಆಗಮಿಸಿದೆ. ಝಡ್ ಪ್ಲಸ್ ಭದ್ರತೆಯೊಂದಿಗೆ ಹೆಚ್ ಎ ಎಲ್ ವಿಮಾನ ನಿಲ್ದಾಣದ ಮೂಲಕ ತಮಿಳುನಾಡಿಗೆ ತೆರಳಲಿದ್ದಾರೆ.
ಅಕ್ರಮ ಆಸ್ತಿಗಳಿಕೆ ಪ್ರಕರಣ ಹಿನ್ನಲೆಯಲ್ಲಿ ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ಜಯಲಲಿತಾ ಅವರಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ ನೂರು ಕೋಟಿ ರೂ ದಂಡ ವಿಧಿಸಿ ಆದೇಶ ಹೊರಡಿಸಿತ್ತು. ಅ.17ರಂದು ಸುಪ್ರೀಂ ಕೋರ್ಟ್ ಜಯಲಲಿತಾ ಅವರಿಗೆ ಜಾಮೀನು ಮಂಜೂರು ಮಾಡಿದ್ದು, ನಾಲ್ಕು ವರ್ಷ ಜೈಲು ಶಿಕ್ಷೆಯನ್ನೂ ನ್ಯಾಯಾಲಯ ಅಮಾನತ್ತಿನಲ್ಲಿಟ್ಟಿದೆ.