ಬೆಂಗಳೂರು : ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಕೆಲ ಸಮಯದಲ್ಲಿ ಬಿಡುಗಡೆಯಾಗಲಿದ್ದಾರೆ. ಜೈಲಿನ ಸುತ್ತಮುತ್ತ ಜಯಲಲಿತಾ ಅಭಿಮಾನಿಗಳು ಹಾಗೂ ಎಐಎಡಿಎಂಕೆ ಕಾರ್ಯಕರ್ತರು ಕಾತರರಾಗಿ ಕಾಯುತ್ತಿದ್ದಾರೆ.
ವಿಶೇಷ ನ್ಯಾಯಾಲಯದ ನ್ಯಾ.ಮೈಕೆಲ್ ಕುನ್ಹಾ, ಜಯಲಲಿತಾ ಹಾಗೂ ಉಳಿದ ಮೂವರು ಅಪರಾಧಿಗಳನ್ನು ಬಿಡುಗಡೆಗೊಳಿಸುವಂತೆ ಜೈಲು ಅಧೀಕ್ಷಕರಿಗೆ ಆದೇಶ ನೀಡಿದ್ದಾರೆ. ಈಗಾಗಲೇ ತಲಾ 1 ಕೋಟಿ ಶ್ಯೂರಿಟಿ ಹಾಗೂ ಬಾಂಡ್ ಪ್ರಕ್ರಿಯೆ ಕೂಡ ಮುಕ್ತಾಯವಾಗಿದೆ.
ಒಂದು ವೇಳೆ ಅಪರಾಧಿಗಳು ನಾಪತ್ತೆಯಾದರೇ ನೀವೆ ಜವಾಬ್ದಾರರಾಗಿದ್ದು, ಕೋರ್ಟ್ ಗೆ ಹಾಜರಾಗದಿದ್ದಲ್ಲಿ ನಿಮ್ಮ ಆಸ್ತಿ ಮುಟ್ಟುಗೋಲು ಹಾಕಲಾಗುವುದು ಎಂದು ನ್ಯಾಯಾಧೀಶರು ಶ್ಯೂರಿಟಿದಾರರಿಗೆ ಎಚ್ಚರಿಕೆ ನೀಡಿದ್ದಾರೆ.
ಈ ನಡುವೆ ಪರಪ್ಪನ ಅಗ್ರಹಾರದ ಬಳಿ ಜಯಲಲಿತಾ ಬೆಂಬಲಿಗರು ಹಾಗೂ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದು, ಜಯಲಲಿತಾ ಪರ ಘೋಷಣೆಗಳನ್ನು ಕೂಗುತ್ತಿದ್ದಾರೆ.
ಸ್ಥಳಕ್ಕೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ದಿ ಭೇಟಿ ನೀಡಿದ್ದು, ಮುಂಜಾಗೃತಾ ಕ್ರಮವಾಗಿ ಜೈಲಿನ ಸುತ್ತ 1 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ನೆ ಜಾರಿಗೊಳಿಸಲಾಗಿದೆ. ಜಯಲಲಿತಾ ಅವರಿಗೆ ಝಡ್ ಪ್ಲಸ್ ಭದ್ರತೆ ಮುಂದುವರೆಸಲಾಗಿದ್ದು, ಹೆಚ್ ಎ ಎಲ್ ವಿಮಾನ ನಿಲ್ದಾಣದವರೆಗೂ ಸುಗಮ ಸಂಚಾರ ವ್ಯವಸ್ಥೆ ಕೈಗೊಳ್ಳಲಾಗಿದೆ. ಅಲ್ಲಿಂದ ವಿಶೇಷ ವಿಮಾನದಲ್ಲಿ ಚೆನ್ನೈಗೆ ತೆರಳಲಿದ್ದಾರೆ ಎಂದು ತಿಳಿಸಿದರು.