ನವದೆಹಲಿ : ಮಹಾರಾಷ್ಟ್ರ ಹಾಗೂ ಹರ್ಯಾಣ ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿರುವುದಕ್ಕೆ ಪಕ್ಷದ ವರಿಷ್ಠರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಭುಗಿಲೆದ್ದಿದೆ.
ಉಭಯ ರಾಜ್ಯಗಳಲ್ಲಿ ಬಿಜೆಪಿ ಅಭೂತ ಪೂರ್ವ ಗೆಲುವು ಸಾಧಿಸುತ್ತಿದ್ದಂತೆಯೇ ಕಾಂಗ್ರೆಸ್ ಸೋಲು ಖಚಿತ ಎಂದು ಮನಗೊಂಡ ಕೈ ಕಾರ್ಯಕರ್ತರು ನವದೆಹಲಿಯ ಪಕ್ಷದ ಕಛೇರಿ ಬಳಿ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕತ್ವ ಬದಲಾವಣೆಗೆ ಒತ್ತಾಯಿಸಿದ್ದಾರೆ.
ಇಂಟಕ್ನ ನಾಯಕ ಜಗದೀಶ್ ಶರ್ಮಾ ಅವರ ನೇತೃತ್ವದಲ್ಲಿ ಆಗಮಿಸಿದ ಕಾರ್ಯಕರ್ತರು ಕಾಂಗ್ರೆಸ್ ಕಛೇರಿ ಬಳಿ ಪ್ರತಿಭಟನೆ ನಡೆಸಿದರು. ಹಿರಿಯ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಪ್ರಿಯಾಂಕಾ ಗಾಂಧಿ ಕರೆತನ್ನಿ, ದೇಶ ಉಳಿಸಿ ಎಂಬ ಘೋಷಣೆಗಳನ್ನು ಕೂಗಿದರು.
ಈ ವೇಳೆ ಮಾತನಾಡಿದ ಶರ್ಮಾ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸಮರ್ಥ ಸಾಥ್ ನೀಡುವಲ್ಲಿ ಪ್ರಿಯಾಂಕ ಅವರನ್ನು ಸಕ್ರಿಯ ರಾಜಕಾರಣಕ್ಕೆ ಕರೆತರುವ ಅವಶ್ಯಕತೆಯಿದೆ. ಪಕ್ಷದಲ್ಲಿ ಪ್ರಿಯಾಂಕಾ ಅವರಿಗೆ ಪ್ರಮುಖ ಜವಾಬ್ದಾರಿ ನೀಡುವಂತೆ ಒತ್ತಾಯಿಸಿದರು.