ಬೆಂಗಳೂರು : ಶಿವಮೊಗ್ಗ ಹಾಗೂ ಹಾಸನದ ಸರ್ಕಾರಿ ಪಶುವೈದ್ಯಕೀಯ ಕಾಲೇಜುಗಳಿಗೆ ಭಾರತೀಯ ಪಶುವೈದ್ಯಕೀಯ ಪರಿಷತ್ತು ಮಾನ್ಯತೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಹಾಗೂ ಪಶುಸಂಗೋಪನಾ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.
ಸುದ್ದಿಗೋಷ್ಠಿ ನಡೆಸಿದ ಅವರು, ಈ ವಿಷಯ ತಿಳಿಸಿದ್ದು, ಭಾರತೀಯ ಪಶು ವೈದ್ಯಕೀಯ ಪರಿಷತ್ತಿನ ಅಧ್ಯಕ್ಷ ಡಾ:ಉಮೇಶ್ ಚಂದ್ರ ಶರ್ಮ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಎರಡೂ ಕಾಲೇಜುಗಳಿಗೆ ಮಾನ್ಯತೆ ನೀಡಲು ತೀರ್ಮಾನಿಸಲಾಗಿದೆ ಎಂದರು.
ಶಿವಮೊಗ್ಗದ ಪಶುವೈದ್ಯಕೀಯ ಕಾಲೇಜಿಗೆ 24-8-2011 ರಿಂದ ಅನ್ವಯವಾಗುವಂತೆ ಹಾಗೂ ಹಾಸನ ಪಶುವೈದ್ಯಕೀಯ ಕಾಲೇಜಿಗೆ 24-8-2012 ರಿಂದ ಅನ್ವಯವಾಗುವಂತೆ ಮಾನ್ಯತೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಈವರೆಗೆ ಈ ಕಾಲೇಜುಗಳಿಗೆ ಮಾನ್ಯತೆ ದೊರೆಯದ ಕಾರಣ ಇಲ್ಲಿ ಪದವಿ ಪಡೆದ ವಿದ್ಯಾರ್ಥಿಗಳು ತೊಂದರೆಗೀಡಾಗಿದ್ದರು. ನಮ್ಮ ಸರ್ಕಾರವು ಮೂಲಸೌಕರ್ಯ ಅಭಿವೃದ್ಧಿಗಾಗಿ ಶಿವಮೊಗ್ಗದ ಕಾಲೇಜಿಗೆ 137 ಕೋಟಿ ರೂ. ಹಾಗೂ ಹಾಸನ ಕಾಲೇಜಿಗೆ 131 ಕೋಟಿ ರೂ,. ಬಿಡುಗಡೆ ಮಾಡಿತ್ತು. ಸರ್ಕಾರದ ಪ್ರಯತ್ನದ ಫಲವಾಗಿ ಈ ಕಾಲೇಜುಗಳಲ್ಲಿ ಪದವಿ ಪಡೆದ ವಿದ್ಯಾರ್ಥಿಗಳ ಆತಂಕ ನಿವಾರಣೆಯಾಗಿದೆ ಎಂದು ಸಚಿವರು ತಿಳಿಸಿದ್ದಾರೆ.