ನವದೆಹಲಿ : ಒಂದೆಡೆ ಸ್ವಚ್ಛ ಭಾರತ ಅಭಿಯಾನದ ಹೆಸರಿನಲ್ಲಿ ಫೊಟೋಗಳಿಗೆ ಫೋಸು ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರ, ಬಿಜೆಪಿ ಅಂಗಸಂಸ್ಥೆಗಳು ಬಿತ್ತುತ್ತಿರುವ ಕೋಮುದ್ವೇಷವನ್ನು ನಿರ್ಲಕ್ಷಿಸುತ್ತಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಮಾಜಿ ಪ್ರಧಾನಿ ಜವಹರಲಾಲ್ ನೆಹರು ಅವರ 125ನೇ ಜನ್ಮದಿನಾಚರಣೆ ಅಂಗವಾಗಿ ನವದೆಹಲಿಯ ತಲ್ಕತೋರ ಕ್ರೀಡಾಂಗಣದಲ್ಲಿನ.13ರಂದು ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ರಾಹುಲ್ ಗಾಂಧಿ, ದ್ವೇಷ ರಾಜಕೀಯ ನಡೆಸುವವರು ದೇಶವನ್ನು ಮುನ್ನಡೆಸುತ್ತಿದ್ದಾರೆ ಎಂದು ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಸ್ವಚ್ಛ ಭಾರತ ಅಭಿಯಾನದ ಫೊಟೊಗಳಿಗೆ ಮಾತ್ರ ಆದ್ಯತೆ ನೀಡುತ್ತಿದ್ದು, ಕೋಮುಸೌಹಾರ್ದತೆ ಕಾಪಾಡುವ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಪ್ರೀತಿಯ ಮೂಲಕ ಕೋಪ ಮತ್ತು ದ್ವೇಷಗಳನ್ನು ಗೆಲ್ಲಲು ಸಾಧ್ಯ, ಕೋಮುವಾದದ ವಿರುದ್ಧ ಹೋರಾಡುವ ಏಕೈಕ ಪಕ್ಷವೆಂದರೆ ಅದು ಕಾಂಗ್ರೆಸ್ ಎಂದು ಹೇಳಿದ್ದಾರೆ. ಕಾಂಗ್ರೆಸ್ ತಪ್ಪು ಮಾಡಿಯೇ ಇಲ್ಲ ಎಂದು ಹೇಳುತ್ತಿಲ್ಲ. ಆದರೆ ನಮ್ಮ ಚಿಂತನೆಗಳು ಬದಲಾಗಿಲ್ಲ ಎಂದು ರಾಹುಲ್ ಗಾಂಧಿ ಇದೇ ವೇಳೆ ತಿಳಿಸಿದ್ದಾರೆ.
ಇದೇ ವೇಳೆ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ನೆಹರು, ಗಾಂಧಿ ದೇಶಕ್ಕಾಗಿ ಪ್ರಾಣವನ್ನು ಮುಡಿಪಾಗಿಟ್ಟಿದ್ದರು. ಹಿಂದಿ ಭಾಷೆಯನ್ನು ಬಳಸಬೇಕೆಂದು ಕರೆ ನೀಡಿದ್ದರು. ಆದರೆ ನೆಹರು, ಗಾಂಧಿ ಪರಂಪರೆ ಹಾಗೂ ಅವರ ಜಾತ್ಯಾತೀತ ವಿಚಾರಧಾರೆಗಳನ್ನು ಕಡೆಗಣಿಸಲಾಗುತ್ತಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೆಹರು ಜನ್ಮದಿನಾಚರಣೆ ಅಂಗವಾಗಿ ಕಾಂಗ್ರೆಸ್ 2 ದಿನದ ಅಂತಾರಾಷ್ಟ್ರೀಯ ಸಮಾವೇಶ ಹಮ್ಮಿಕೊಂಡಿದೆ. ಆದರೆ ಈ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸದೇ ಅಪಮಾನ ಮಾಡಿದೆ. ಪ್ರಧಾನಿ ಮೋದಿಗೆ ಆಹ್ವಾನ ನೀಡದೇ ಇರುವವರು ದ್ವೇಷದ ರಾಜಕಾರಣದ ಬಗ್ಗೆ ಮಾತನಾಡುತ್ತಿರುವುದರ ಬಗ್ಗೆ ಮಾಧ್ಯಮಗಳಲ್ಲಿ ಚರ್ಚೆ ಕಾವೇರುತ್ತಿದೆ.