ಬೆಂಗಳೂರು : ಮಕ್ಕಳಿಗೆ ಶಿಕ್ಷಣ ನೀಡದೇ ಇರುವುದು ಕೂಡ ಶೋಷಣೆಯ ಒಂದು ರೂಪ. ಹೀಗಾಗಿ ಪೋಷಕರು ಮಕ್ಕಳನ್ನು ಬಾಲಕಾರ್ಮಿಕರನ್ನಾಗಿ ಮಾಡದೆ ವಿದ್ಯಾವಂತರನ್ನಾಗಿ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಕರೆ ನೀಡಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಕ್ಕಳ ಸಂಸತ್ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿಕ್ಷಣದಿಂದ ಮಕ್ಕಳ ಮಾನಸಿಕ ಹಾಗೂ ವ್ಯಕ್ತಿತ್ವ ವಿಕಾಸಗೊಳ್ಳುತ್ತದೆ ಎಂದರು.
ಶಿಕ್ಷಣ ನೀಡದೇ ಇರುವುದು ಕೂಡ ಮಕ್ಕಳ ಮೇಲೆ ನಡೆಯುವ ಶೋಷಣೆ, ಮಕ್ಕಳ ಹಕ್ಕುಗಳ ಬಗ್ಗೆ ಪ್ರತಿಯೊಬ್ಬರೂ ಜಾಗೃತರಾಗಬೇಕು. ಇಂದಿನ ಮಕ್ಕಳೇ ಭವಿಷ್ಯದ ಪ್ರಜೆಗಳು. ಅವರನ್ನು ಸಂಪತ್ಭರಿತರನ್ನಾಗಿ ಮಾಡುವುದು ಶಿಕ್ಷಣದಿಂದ ಸಾಧ್ಯ ಎಂದು ತಿಳಿಸಿದರು.
ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ನಿಜಕ್ಕೂ ಅಮಾನವೀಯ. ಇದಕ್ಕಿಂತಲೂ ಹೀನಾಯ ಕೃತ್ಯ ಇನ್ನೊಂದಿಲ್ಲ. ಮಕ್ಕಳ ಮೇಲೆ ಇಂತಹ ಕೃತ್ಯ ನಡೆಸುತ್ತಿರುವ ಮನುಷ್ಯರು ಎರಡು ಕಾಲಿನ ಮೃಗಗಳು ಎಂದು ಕಿಡಿಕಾರಿದರು.
ಅತ್ಯಾಚಾರ ಪ್ರಕರಣಗಳನ್ನು ತಡೆಗಟ್ಟಲು ಮತ್ತು ಕಾನೂನನ್ನು ಬಲಿಷ್ಠಗೊಳಿಸಲು ಹಿರಿಯ ಶಾಸಕ ಎಂ.ಸಿ.ನಾಣಯ್ಯ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ. ಅದೇ ರೀತಿ ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದ್ದು, ಅವುಗಳ ಅನುಷ್ಟಾನಕ್ಕೆ ಮುಖ್ಯಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸುವುದಾಗಿ ಹೇಳಿದರು.
ರಾಜ್ಯದಲ್ಲಿ 1ರಿಂದ6 ವರ್ಷದೊಳಗಿನ ಮಕ್ಕಳ ಸಂಖ್ಯೆ 72 ಲಕ್ಷ, ಒಟ್ಟು ಜನಸಂಖ್ಯೆಯ ಶೇ.40ರಷ್ಟು ಈ ಮಕ್ಕಳಿದ್ದಾರೆ. ಇವರಿಗೆ ಸರಿಯಾದ ಜ್ಞಾನ ಮತ್ತು ಸೌಲಭ್ಯಗಳನ್ನು ಒದಗಿಸಿ ಭವಿಷ್ಯದ ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ ಎಂದು ತಿಳಿಸಿದರು.