ನವದೆಹಲಿ : ಡಿ.6 ಬಾಬ್ರಿ ಮಸೀದಿ ಧ್ವಂಸ ದಿನವಾದ ಹಿನ್ನೆಲೆಯಲ್ಲಿ ಯಾವುದೇ ಅವಘಡಗಳು ಸಂಭವಿಸದಂತೆ ದೇಶಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ.
ಬಾಬ್ರಿ ಮಸೀದಿ ಧ್ವಂಸಗೊಂಡು ಡಿ.6ಕ್ಕೆ 22 ವರ್ಷ. ಈ ಮಧ್ಯೆ ದೇಶದಲ್ಲಿ ಯಾವುದೇ ಅವಘಡಗಳು ಸಂಭವಿಸದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಚ್ಚರ ವಹಿಸಿವೆ. ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಸೇರಿಂದತೆ ಸಾರ್ವಜನಿಕ ಸ್ಥಳಗಳಲ್ಲಿ ಬಿಗಿ ಭದ್ರತೆ ವಹಿಸಲಾಗಿದ್ದು, ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು, ಪ್ರಮುಖ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದು, ಅನುಮಾನಸ್ಪದ ವ್ಯಕ್ತಿಗಳ ಓಡಾಟದ ಮೇಲೆ ನಿಗಾ ವಹಿಸಲಾಗಿದೆ.
ಉತ್ತರಪ್ರದೇಶ, ಮುಂಬೈ, ದೆಹಲಿ, ಕೊಲ್ಕತ್ತಾ, ಚೆನ್ನೈ, ಹೈದ್ರಬಾದ್, ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಯಾವುದೇ ಅವಘಡಗಳು ಸಂಭವಿಸಿದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಚೆನ್ನೈನಲ್ಲೂ ಪೊಲೀಸ್ ಇಲಾಖೆ ಭಿಗಿ ಭದ್ರತೆ ವಹಿಸಿದೆ. ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಹಾಗೂ ವಿಮಾನ ನಿಲ್ದಾಣಗಳಲ್ಲಿ ಪೊಲೀಸ್ ಹದ್ದಿನ ಕಣ್ಣಿಟ್ಟಿದೆ. ಚೆನ್ನೈ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಕಲ್ಪಿಸುವ ನಿಟ್ಟಿನಲ್ಲಿ 4 ಹೆಚ್ಚುವರಿ ಪೊಲೀಸ್ ಅಧಿಕಾರಿಗಳು, 4 ಜಂಟಿ ಆಯುಕ್ತರು, 19 ಉಪ ಆಯುಕ್ತರು, 18.000 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಈ ನಡುವೆ ಯಾವುದೇ ಪ್ರತಿಭಟನೆ ಹಾಗೂ ಹೋರಾಟಗಳನ್ನು ನಡೆಸದಂತೆ ಬಾಬ್ರಿ ಮಸೀದಿ ಕ್ರೀಯಾ ಸಮಿತಿ ವಿನಂತಿಸಿಕೊಂಡಿದೆ. 1992 ರ ಡಿಸೆಂಬರ್ 6 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿದ್ದ 16ನೇ ಶತಮಾನದ ಬಾಬರಿ ಮಸೀದಿಯನ್ನು ಧ್ವಂಸಗೊಳಿಸಿದ್ದ ಘಟನೆ ಈಡೀ ದೇಶದಲ್ಲಿ ಸಂಚಲನ ಮೂಡಿಸಿತ್ತು.