ನವದೆಹಲಿ : 'ಪಿಕೆ' ಸಿನಿಮಾ ವಿರುದ್ಧ ಭಜರಂಗದಳ ಸೇರಿದಂತೆ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದರೂ ಬಿಜೆಪಿ ಸರ್ಕಾರ ಮೌನ ವಹಿಸಿರುವುದಕ್ಕೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಿಕೆ ಚಿತ್ರವನ್ನು ವಿರೋಧಿಸಿ ವಿಧ್ವಂಸಕ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿರುವುದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರಶ್ನಿಸಲಿದ್ದಾರೆಯೇ? ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಟ್ವಿಟರ್ ನಲ್ಲಿ ಪ್ರಶ್ನಿಸಿದ್ದಾರೆ. ಅಲ್ಲದೇ ಪ್ರತಿಭಟನೆ ನಡೆಸುತ್ತಿರುವ ಗೂಂಡಾಗಳ ವಿರುದ್ಧ ಕ್ರಮ ಕೈಗೊಳ್ಳಲು ಪ್ರಧಾನಿ ಮೋದಿ ಗುಜರಾತ್ ಮುಖ್ಯಮಂತ್ರಿಗೆ ಸೂಚನೆ ನೀಡಲಿ ಒತ್ತಾಯಿಸಿದ್ದಾರೆ.
ಪಿಕೆ ಸಿನಿಮಾದ ವಿರುದ್ಧ ಪ್ರತಿಭಟನೆ ನಡೆಸುವ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಮಾಡುತ್ತಿರುವ ಗೂಂಡಾಗಳ ವಿರುದ್ಧ ಕ್ರಮಕ್ಕೆ ಮೋದಿ ಸೂಚನೆ ನೀಡುವುದಿಲ್ಲ ಆದರೆ ಈ ಕೃತ್ಯವನ್ನು ಖಂಡಿಸುವುದೂ ಇಲ್ಲ ಏಕೆಂದರೆ ಪ್ರಧಾನಿ ಮೋದಿ ಅವರಿಗೆ ಭಜರಂಗದಳ ಹಾಗೂ ಹಿಂದೂ ಸಂಘಟನೆಗಳು ನಡೆಸುತ್ತಿರುವ ಪುಂಡ ಬಜರಂಗದಳದ ತಂಡದ ಬಗ್ಗೆ ಭರವಸೆ ಇದೆ ಎಂದು ದಿಗ್ವಿಜಯ್ ಸಿಂಗ್ ಆರೋಪಿಸಿದ್ದಾರೆ.
ಇದೇ ವೇಳೆ ಹಿಂದೂ ಪರ ಸಂಘಟನೆಗಳ ಪ್ರತಿಭಟನೆ ಬಗ್ಗೆ ಬಿಜೆಪಿ ಮೌನ ವಹಿಸಿರುವುದಕ್ಕೆ ಕಿಡಿಕಾರಿರುವ ಮಾಜಿ ಕೇಂದ್ರ ಸಚಿವ ಮನೀಶ್ ತಿವಾರಿ, ಹಿಂದೂ ಸಂಘಟನೆಗಳು ಪಿಕೆ ಚಿತ್ರದ ವಿರುದ್ಧ ಪ್ರತಿಭಟನೆ ನಡೆಸುವ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ಉಂಟುಮಾಡುತ್ತಿದ್ದಾರೆ. ಈ ಬಗ್ಗೆ ಬಿಜೆಪಿ ಏಕೆ ಮೌನವಾಗಿದೆ ಎಂದು ಪ್ರಶ್ನಿಸಿದ್ದಾರೆ.
ಪಿಕೆ ಚಿತ್ರದಲ್ಲಿ ಹಿಂದೂ ಧರ್ಮದ ಬಗ್ಗೆ ಅವಹೇಳನ ಮಾಡಲಾಗಿದೆ ಎಂದು ಆರೋಪಿಸಿ, ಭಜರಂಗದಳ, ವಿಶ್ವಹಿಂದೂ ಪರಿಷತ್ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.