ಜಮ್ಮು-ಕಾಶ್ಮೀರ : 'ಜಮ್ಮು-ಕಾಶ್ಮೀರ'ದಲ್ಲಿ ಪಿಡಿಪಿ ಮತ್ತು ಬಿಜೆಪಿ ಸಮ್ಮಿಶ್ರ ಸರ್ಕಾರ ರಚನೆಯಾಗುವುದು ಬಹುತೇಕ ಖಚಿತವಾಗಿದೆ.
ಅತಂತ್ರ ಫಲಿತಾಂಶದಿಂದ ಕಣಿವೆ ರಾಜ್ಯದಲ್ಲಿ ಸರ್ಕಾರ ರಚನೆ ಬಿಕ್ಕಟ್ಟು ಉಂಟಾಗಿತ್ತು. ಆದರೆ ಪಿಡಿಪಿ ಬಿಜೆಪಿ ಬೆಂಬಲದೊಂದಿಗೆ ಸರ್ಕಾರ ರಚನೆ ಮಾಡಲಿದೆ ಎಂದು ತಿಳಿದುಬಂದಿದೆ. ರಾಜ್ಯಪಾಲರ ಭೇಟಿ ಮಾಡಿದ ಬಳಿಕ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ನೀಡಿರುವ ಹೇಳಿಕೆ ಪಿಡಿಪಿ-ಬಿಜೆಪಿ ಸಮ್ಮಿಶ್ರ ಸರ್ಕಾರ ರಚನೆಯಾಗುವುದು ಖಚಿತ ಎಂಬ ಸುಳಿವು ದೊರೆತಿದೆ.
ಮಾಧ್ಯಮಗಳೊಂದಿಗೆ ಮಾತನಾಡುವ ವೇಳೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಶ್ಲಾಘಿಸಿದ ಮುಫ್ತಿ ಅವರು, ವಾಜಪೇಯಿ ಅವರು ದೂರದೃಷ್ಟಿವುಳ್ಳ ಜವಾಬ್ದಾರಿಯುತ ವ್ಯಕ್ತಿಯಾಗಿದ್ದು, ಅವರ ನೀತಿಗಳನ್ನು ನಾವು ಮತ್ತೆ ವಾಪಸ್ ತರಬೇಕಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೆಚ್ಚಿನ ಜವಾಬ್ದಾರಿ ಇದ್ದು, ಮೋದಿ ಅವರು ಅದನ್ನು ನಿಭಾಯಿಸಬಲ್ಲರು. ರಾಜ್ಯಕ್ಕೆ ವಾಜಪೇಯಿ ಅವರ ವಿಧಾನ ಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಇನ್ನು ಪಿಡಿಪಿ ಪಕ್ಷದೊಂದಿಗೆ ಕೈ ಜೋಡಿಸುವ ಕುರಿತು ಬಿಜೆಪಿ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದೆಯಾದರೂ ತೆರೆ ಮರೆಯಲ್ಲಿ ಸರ್ಕಾರ ರಚನೆ ಕಸರತ್ತು ಕೂಡ ನಡೆಸಿದೆ. ತಮ್ಮ ಪಕ್ಷದವರೇ ಮುಖ್ಯಮಂತ್ರಿಯಾಗಬೇಕೆಂದು ಬಿಜೆಪಿ-ಪಿಡಿಪಿ ಪಟ್ಟುಹಿಡಿದಿದ್ದರಿಂದ ಸರ್ಕಾರ ರಚನೆ ವಿಳಂಬವಾಗಿತ್ತು.