ನವದೆಹಲಿ : ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣ ಪುನಾರಂಭಿಸುವ ಸಾಧ್ಯತೆ ದಟ್ಟವಾಗಿದೆ. ಈ ಬಗ್ಗೆ ಖುದ್ದು ರಕ್ಷಣಾ ಸಚಿವ ಮನೋಹರ್ ಪರ್ರಿಕರ್ ಅವರು ನಾಗರಿಕ ವಿಮಾನ ಯಾನ ಖಾತೆ ಸಚಿವ ಅಶೋಕ ಪಶುಪತಿ ಗಜಪತಿ ರಾಜು ಅವರಿಗೆ ಪತ್ರ ಬರೆದಿದ್ದಾರೆ.
ಎಚ್ಎಎಲ್ ವಿಮಾನ ನಿಲ್ದಾಣ ಬೆಂಗಳೂರು ನಗರಕ್ಕೆ ಸಮೀಪದಲ್ಲಿದ್ದು, ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಏರ್ಪೋರ್ಟ್ ಮುಚ್ಚಿದ ಬಳಿಕ ಎಚ್ಎಎಲ್ಗೆ ತೀವ್ರ ಆದಾಯ ನಷ್ಟವಾಗುತ್ತಿದೆ ಎಂದು ಪರ್ರಿಕರ್ ಕಳೆದ ಡಿ. 8ರಂದು ಬರೆದ ಪತ್ರದಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಂಡಳಿ(ಹಿಂದಿನ ಬಿಐಎಎಲ್) ಹೊಸ ಏರ್ಪೋರ್ಟ್ ಸುತ್ತಲಿನ 150 ಕಿಮಿ ವ್ಯಾಪ್ತಿಯಲ್ಲಿ ಯಾವುದೇ ಹೊಸ ಏರ್ಪೋರ್ಟ್ ಇರುವಂತಿಲ್ಲ ಎಂದು ಷರತ್ತು ವಿಧಿಸಿತ್ತು ಎಂದು ವಿಮಾನಯಾನ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸದ್ಯ ಅದನ್ನು ರಕ್ಷಣಾ ಇಲಾಖೆ ಉಪಯೋಗಕ್ಕಷ್ಟೇ ಬಳಸಲಾಗುತ್ತಿದೆ.
ವಿಮಾನ ನಿಲ್ದಾಣವನ್ನು ಮುಚ್ಚಿದ್ದರಿಂದ ಎಚ್ಎಎಲ್ಗೆ ವಾರ್ಷಿಕವಾಗಿ ರು. 1,700 ಕೋಟಿ ಮತ್ತು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ರು. 700 ಕೋಟಿ ನಷ್ಟವಾಗುತ್ತಿದೆ ಎಂದು ಸಂಸ್ಥೆ ಅಧ್ಯಕ್ಷ ಆರ್.ಕೆ. ತ್ಯಾಗಿ ಹೇಳಿದ್ದಾರೆ.