BW News Bureau : ಕುಡಿಯುವ ನೀರಿನ ಅಕ್ರಮ ಸಂಪರ್ಕಗಳನ್ನು ಸಕ್ರಮಗೊಳಿಸಿ ತೆರಿಗೆ ವಸೂಲಿ ಮಾಡಬೇಕು ಅಥವಾ ಅಕ್ರಮ ಸಂಪರ್ಕಗಳನ್ನು ನಿಷ್ಕ್ರಿಯಗೊಳಿಸಬೇಕು ಎಂದು ನಗರಾಭಿವೃದ್ಧಿ ಸಚಿವ ವಿನಯ್ ಕುಮಾರ್ ಸೊರಕೆ ಎಲ್ಲ ನಗರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನೀರಿನ ತೆರಿಗೆ ಸಮರ್ಪಕವಾಗಿ ಸಂಗ್ರಹವಾಗದ ಹಿನ್ನೆಲೆಯಲ್ಲಿ ಹಲವು ವರ್ಷಗಳಿಂದ ಬಾಕಿ ಇರುವ ತೆರಿಗೆಯನ್ನು ಸಂಗ್ರಹಿಸುವಂತೆ ಸೂಚಿಸಲಾಗಿದೆ. ಅಕ್ರಮ ಸಂಪರ್ಕಗಳಿದ್ದಲ್ಲಿ ಕೂಡಲೆ ಅವುಗಳನ್ನು ಸಕ್ರಮಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ.
ಸದ್ಯಕ್ಕೆ ನೀರಿನ ದರ ಏರಿಕೆ ಮಾಡುವ ಯಾವುದೇ ಪ್ರಸ್ತಾವನೆ ತಮ್ಮ ಮುಂದೆ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಏಷ್ಯಾ ಡೆವಲಪ್ಮೆಟ್ ಬ್ಯಾಂಕ್, ವಿಶ್ವ ಬ್ಯಾಂಕ್ ಹಾಗೂ ಕೇಂದ್ರ ಸರ್ಕಾರದ ನೆರವಿನಿಂದ ವಾರದ ಎಲ್ಲ ದಿನಗಳಲ್ಲಿ ನಿರಂತರವಾಗಿ ಕೆಲವು ನಗರಗಳಿಗೆ ಕುಡಿಯುವ ನೀರು ಪೂರೈಸಲು ತೀರ್ಮಾನಿಸಲಾಗಿದೆ ಎಂದು ವಿನಯ್ ಕುಮಾರ್ ಸೊರಕೆ ತಿಳಿಸಿದ್ದಾರೆ.
ರಾಜ್ಯದ ಯಾವುದೆ ಭಾಗದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿಲ್ಲ. ಎಲ್ಲ ಕಡೆ ವಿವಿಧ ಮೂಲಗಳಿಂದ ನೀರು ಒದಗಿಸಲಾಗುತ್ತಿದೆ. ಸದ್ಯಕ್ಕಂತೂ ಎಲ್ಲೂ ಸಮಸ್ಯೆ ಕೇಳಿ ಬಂದಿಲ್ಲ. ನೀರಿನ ಅಭಾವ ಎದುರಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸ್ಥಳೀಯ ಸಂಸ್ಥೆಗಳಿಗೆ ಸೂಚನೆ ನೀಡಲಾಗುವುದು ಎಂದರು.