Basavanagudi : ಬೆಂಗಳೂರಿನ ಬಸವನಗುಡಿಯಲ್ಲಿ ನಡೆದ ವಿರಾಟ್ ಹಿಂದೂ ಸಮಾಜೋತ್ಸವದಲ್ಲಿ ನಿಷೇಧದ ನಡುವೆಯೂ ವಿಶ್ವಹಿಂದೂ ಪರಿಷತ್ ನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಭಾಷಣ ಪ್ರಸಾರ ಮಾಡಿದ್ದ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಆಯೋಜಕರ ವಿರುದ್ಧ ಮೂರು ಪ್ರಕರಣಗಳು ದಾಖಲಾಗಿವೆ.
ಶಂಕರಪುರಂ ಪೊಲೀಸ್ ಠಾಣೆಯಲ್ಲಿ ಕಾರ್ಯಕ್ರಮದ ಆಯೋಜಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಹೆಚ್ಚುವರಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್, ಹೈಕೋರ್ಟ್ ಆದೇಶ ಉಲ್ಲಂಘನೆ ಮಾಡಿ ನಿಷೇದಾಜ್ನೆ ನಡುವೆಯೂ ಪ್ರವೀಣ್ ತೊಗಾಡಿಯಾ ಭಾಷಣ ಪ್ರಸಾರ ಮಾಡಿದ್ದರ ವಿರುದ್ಧ ಸೆಕ್ಷನ್ 143, 180 ಅಡಿಯಲ್ಲಿ ಪ್ರವೀಣ್ ತೊಗಾಡಿಯಾ ಹಾಗೂ ಕಾರ್ಯಕ್ರಮದ ಆಯೋಜಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಪ್ರವೀಣ್ ತೊಗಾಡಿಯಾ ಭಾಷಣವನ್ನು ತಡೆಯಲು ಹೋದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದರ ಹಿನ್ನೆಲೆಯಲ್ಲಿ ಸೆಕ್ಷನ್ 353ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಲ್ಲದೇ ಅನುಮತಿ ಪಡೆದಿದ್ದ ಅವಧಿಯನ್ನೂ ಮೀರಿ ಕಾರ್ಯಕ್ರಮ ನಡೆಸಿದ್ದಕ್ಕಾಗಿ ಸೆಕ್ಷನ್ 188ರ ಪ್ರಕಾರ ವಿಶ್ವಹಿಂದೂ ಪರಿಷತ್ ನ ಹಿಂದೂ ಸಮಾಜೋತ್ಸವ ಆಯೋಜಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಲೋಕ್ ಕುಮಾರ್ ತಿಳಿಸಿದ್ದಾರೆ.
ಸಂಜೆ 4ರಿಂದ 6 ವರೆಗೆ ಹಿಂದೂ ಸಮಾಜೋತ್ಸವ ಕಾರ್ಯಕ್ರಮ ನಡೆಸಲು ಆಯೋಜಕರು ಅನುಮತಿ ಕೋರಿದ್ದರು. ಆದರೆ ರಾತ್ರಿ 8 ಗಂಟೆ ವರೆಗೂ ಕಾರ್ಯಕ್ರಮ ನಡೆಸಲಾಗಿತ್ತು ಎಂದು ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ.
ವಿಶ್ವಹಿಂದೂ ಪರಿಷತ್ ಫೆ.8ರಂದು ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಹಿಂದೂ ಸಮಾಜೋತ್ಸವ ಕಾರ್ಯಕ್ರಮ ನಡೆಸಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿದ್ದ ಪ್ರವೀಣ್ ತೊಗಾಡಿಯಾ ಅವರಿಗೆ ರಾಜ್ಯ ಸರ್ಕಾರ ಬೆಂಗಳೂರು ಪ್ರವೇಶಿಸದಂತೆ ನಿರ್ಬಂಧ ಹೇರಿತ್ತು. ಈ ಹಿನ್ನೆಲೆಯಲ್ಲಿ ಪ್ರತಿತಂತ್ರ ರೂಪಿಸಿದ್ದ ವಿ.ಹೆಚ್.ಪಿ ಕಾರ್ಯಕ್ರಮದಲ್ಲಿ ಪ್ರವೀಣ್ ತೊಗಾಡಿಯಾ ಅವರ ಭಾಷಣವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಸಾರ ಮಾಡಿತ್ತು.