ನವದೆಹಲಿ : ಕೇಂದ್ರ ಬಿಜೆಪಿ ಸರ್ಕಾರ ಜೆಡಿಯು ಪಕ್ಷದಲ್ಲಿ ಒಡಕನ್ನುಂಟು ಮಾಡಿ ಬಿಹಾರದಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಿಸಲು ಪ್ರಯತ್ನಿಸುತ್ತಿದೆ ಎಂದು ಜೆಡಿಯು ನಾಯಕ ನಿತೀಶ್ ಕುಮಾರ್ ಆರೋಪಿಸಿದ್ದಾರೆ.
ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರ ಭೇಟಿಯ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಹಾರದಲ್ಲಿ ಸರ್ಕಾರ ರಚಿಸಲು 130 ಶಾಸಕರ ಬೆಂಬಲವಿದ್ದರೂ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಬಹುಮತ ಸಾಬೀತು ಪಡಿಸಲು ಅವಕಾಶ ನೀಡುತ್ತಿಲ್ಲ ಎಂದರು.
ಬಿಹಾರದಲ್ಲಿ ಸರ್ಕಾರ ರಚಿಸಲು ಅವಕಾಶ ಮಾಡಿಕೊಡಬೇಕಾಗಿ ರಾಷ್ಟ್ರಪತಿಭವನದಲ್ಲಿ ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಬಿಹಾರದ ಹಾಲಿ ಮುಖ್ಯಮಂತ್ರಿ ಜೆಡಿಯು ನಾಯಕ ಜಿತನ್ ರಾಂ ಮಾಂಝಿಯವರನ್ನು ಪಕ್ಷದ ಅಧ್ಯಕ್ಷ ಶರದ್ ಯಾದವ್, ಪಕ್ಷದಿಂದ ಉಚ್ಛಾಟಿಸಿ, ನಿತೀಶ್ ಕುಮಾರ್ ಅವರನ್ನು ಬಿಹಾರದ ಸಿಎಂ ಪದವಿಗೇರಲು ಕಸರತ್ತು ನಡೆಸುತ್ತಿದ್ದಾರೆ. ಜೆಡಿಯು ನಾಯಕ ನಿತೀಶ್ ಕುಮಾರ್ ಮತ್ತು 130 ಶಾಸಕರೊಂದಿಗೆ ಆರ್.ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ರಾಷ್ಟ್ರಪತಿ ಭವನಕ್ಕೆ ಆಗಮಿಸಿ ತಮ್ಮ ಬೆಂಬಲ ಸೂಚಿಸಿದ್ದರು.