ಬೆಂಗಳೂರು : 'ಅರ್ಕಾವತಿ' ಡಿನೋಟಿಫಿಕೇಶನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವ ಬಗ್ಗೆ ರಾಜ್ಯಪಾಲರ ಮೇಲೆ ಒತ್ತಡ ಹೇರುವುದಿಲ್ಲ ಎಂದು ವಿರೋಧಪಕ್ಷದ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಮಾ.4ರಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣದಲ್ಲಿ ಮುಖ್ಯಮಂತ್ರಿ ವಿರುದ್ಧ ಮೊಕದ್ದಮೆ ಹೂಡಲು ರಾಜ್ಯಪಾಲರಿಂದ ಅನುಮತಿ ಪಡೆಯಲು ವಕೀಲ ನಟರಾಜ್ ಶರ್ಮ ಭೇಟಿಗೆ ರಾಜ್ಯಪಾಲರು ಅವಕಾಶ ನೀಡುತ್ತಾರೆಂಬ ಭರವಸೆ ಇದೆ. ಆದ್ದರಿಂದ ರಾಜ್ಯಪಾಲರ ಮೇಲೆ ಒತ್ತಡ ಹೇರುವುದಿಲ್ಲ ಎಂದು ಹೇಳಿದ್ದಾರೆ.
ಈಗಾಗಲೇ ಬಿಜೆಪಿ ಕಾನೂನು ಘಟಕ ನ್ಯಾಯಮೂರ್ತಿ ಕೆಂಪಣ್ಣ ಆಯೋಗಕ್ಕೆ ಅರ್ಕಾವತಿ ಡಿನೋಟಿಫಿಕೇಷನ್ ಕುರಿತ ದಾಖಲೆಗಳನ್ನು ಸಲ್ಲಿಸಿದೆ ಎಂದರು. ರಾಜ್ಯಪಾಲರ ಭೇಟಿಗೆ ಇನ್ನೂ ಅವಕಾಶ ಸಿಕ್ಕಿಲ್ಲ. ಮಾಧ್ಯಮಗಳಲ್ಲಿ ಅರ್ಕಾವತಿ ಡಿನೋಟಿಫಿಕೇಷನ್ ಕುರಿತಂತೆ ಚರ್ಚೆಯಾಗುತ್ತಿರುವ ವಿಷಯವನ್ನು ರಾಜ್ಯಪಾಲರು ಗಮನ ಹರಿಸಿರುತ್ತಾರೆ. ಈ ವಿಚಾರದಲ್ಲಿ ಅವರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ಭರವಸೆ ವ್ಯಕ್ತಪಡಿಸಿದರು.
ಅರ್ಕಾವತಿ ಡಿನೋಟಿಫಿಕೇಶನ್ ಹಗರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹೋರಾಟ ನಡೆಸಲು ತೀರ್ಮಾನಿಸಿರುವ ಬಿಜೆಪಿ, ಸಿ.ಎಂ ವಿರುದ್ಧ ತನಿಖೆ ನಡೆಸಲು ಅನುಮತಿ ನೀಡಬೇಕೆಂದು ರಾಜ್ಯಪಾಲರನ್ನು ಮನವಿ ಮಾಡಿದೆ. ಮನವಿ ಸಲ್ಲಿಸಿ ಒಂದು ತಿಂಗಳು ಕಳೆದರೂ ರಾಜ್ಯಪಾಲರು ಯಾವುದೇ ರೀತಿಯ ಪ್ರತಿಕ್ರಿಯೆ ನೀಡಿಲ್ಲ.