BW News Bureau : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಗೆ ಸಂಬಂಧಿಸಿದ ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಬುಧವಾರಕ್ಕೆ ಮುಂದೂಡಿದೆ.
ಬಿಬಿಎಂಪಿಯನ್ನು ಮೂರು ಭಾಗವಾಗಿ ವಿಭಜಿಸಬೇಕು ಎಂಬ ರಾಜ್ಯ ಸರ್ಕಾರದ ಮಹದಾಸೆಗೆ ರಾಜ್ಯಪಾಲ ವಜುಭಾಯ್ ವಾಲಾ ತಡೆಯೊಡ್ಡಿದ್ದರು. ಏತನ್ಮಧ್ಯೆ ಬಿಬಿಎಂಪಿಗೆ ಚುನಾವಣೆ ನಡೆಸುವ ಬಗ್ಗೆ ರಾಜ್ಯ ಸರ್ಕಾರ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು.
ಸೋಮವಾರ ವಿಚಾರಣೆಯನ್ನು ಕೈಗೆತ್ತಿಕೊಂಡ ಹೈಕೋರ್ಟ್ ವಿಭಾಗೀಯ ಪೀಠ, ನಿಮ್ಮ ಮನವಿ ಮೇರೆಗೆ 10:30ಕ್ಕೆ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿದ್ದೇವೆ. ಆದರೆ ಈಗ ವಿಚಾರಣೆ ಮುಂದೂಡಿಕೆ ಕೇಳಿದ್ದು ಯಾಕೆ? ಎಂದು ಅಸಮಾಧಾನ ವ್ಯಕ್ತಪಡಿಸಿದೆ.
ಕೋರ್ಟ್ ಆದೇಶದಂತೆ ಇಂದು ಸಂಜೆಯೊಳಗೆ ಬಿಬಿಎಂಪಿ ಚುನಾವಣೆಯ ಮೀಸಲಾತಿ ಪಟ್ಟಿಯನ್ನು ಸಲ್ಲಿಸುತ್ತೇವೆ. ಕೆಲವೊಂದು ಪ್ರಕ್ರಿಯೆಗಳು ಬಾಕಿ ಇದ್ದು, ವಿಚಾರಣೆಯನ್ನು ಮುಂದೂಡುವಂತೆ ಸರ್ಕಾರದ ಪರ ಎಎಜಿ ಎ.ಎಸ್.ಪೊನ್ನಣ್ಣ ಮನವಿ ಮಾಡಿಕೊಂಡರು. ವಾದ ಆಲಿಸಿದ ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.
ಅಲ್ಲದೇ ಬಿಬಿಎಂಪಿ ವಿಭಜನೆಯ ಪಿಐಎಲ್ ವಿಚಾರಣೆ ವೇಳೆ, ಏಪ್ರಿಲ್ 13ರೊಳಗೆ ಮೀಸಲಾತಿ ಪಟ್ಟಿಯನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಇಲ್ಲದಿದ್ದಲ್ಲಿ ಈ ಹಿಂದಿನ ಮೀಸಲಾತಿ ಪಟ್ಟಿಯಂತೆ ಚುನಾವಣೆ ನಡೆಸುವುದಾಗಿ ಹೈಕೋರ್ಟ್ ಹೇಳಿತ್ತು.
ಆ ಹಿನ್ನೆಲೆಯಲ್ಲಿ ಇಂದು ಸಂಜೆಯೊಳಗೆ ರಾಜ್ಯ ಚುನಾವಣಾ ಆಯೋಗ ಚುನಾವಣಾ ವೇಳಾ ಪಟ್ಟಿ ಬಗ್ಗೆ ನಿರ್ಧರಿಸುವ ಸಾಧ್ಯತೆ ಇದೆ. ಇದೀಗ ರಾಜ್ಯ ಸರ್ಕಾರದ ನಡೆ ಬಗ್ಗೆ ಎಲ್ಲರ ಚಿತ್ತ ನೆಟ್ಟಿದೆ.