ಬೆಂಗಳೂರು : ರಾಜ್ಯ ಸರ್ಕಾರದ ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ತಮಿಳುನಾಡು ಸರ್ಕಾರದ ಧೋರಣೆಯನ್ನು ಖಂಡಿಸಿ ಏ.18ರಂದು ಕನ್ನಡ ಒಕ್ಕೂಟ ಕರೆ ನೀಡಿರುವ ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.
ಬಂದ್ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಏ.17ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದ ವಾಟಾಳ್ ನಾಗರಾಜ್, ಪರೀಕ್ಷೆ, ತುರ್ತು ಸೇವೆಗಳನ್ನು ಹೊರತುಪಡಿಸಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ರಾಜ್ಯ ಬಂದ್ನ್ನು ಯಶಸ್ವಿಗೊಳಿಸಬೇಕೆಂದು ರಾಜ್ಯದ ಜನತೆಯಲ್ಲಿ ಮನವಿ ಮಾಡಿದ್ದಾರೆ.
'ಇದು ಕುಡಿಯುವ ನೀರಿಗಾಗಿ ನಡೆಸುತ್ತಿರುವ ಹೋರಾಟ. ನಮ್ಮ ಸರ್ಕಾರದ ವಿರುದ್ಧದ ಹೋರಾಟವಲ್ಲ. ನಾಳೆ ನಡೆಯಲಿರುವ ಬಂದ್ ನಲ್ಲಿ ಕನ್ನಡಿಗರ ಶಕ್ತಿ ಪ್ರದರ್ಶನ ತಮಿಳುನಾಡಿಗೆ ಎಚ್ಚರಿಕೆಯ ಸಂದೇಶವಾಗಬೇಕು' ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ.
ಕನ್ನಡಪರ ಸಂಘಟನೆಗಳು, ಲಾರಿ ಮಾಲೀಕರ ಸಂಘ, ಆಟೋ, ಟ್ಯಾಕ್ಸಿ ಚಾಲಕರ ಸಂಘ, ಕೆ.ಎಸ್.ಆರ್.ಟಿ.ಸಿ, ಬಿಎಂಟಿಸಿ ನೌಕರರ ಸಂಘ ಸೇರಿದಂತೆ ನೂರಾರು ಸಂಘಟನೆಗಳು ಸ್ವಯಂಪ್ರೇರಿತವಾಗಿ ಬಂದ್ಗೆ ಬೆಂಬಲ ನೀಡಿರುವುದರಿಂದ ಏ.18ರಂದು ಬಸ್ ಮತ್ತು ಆಟೋ ಸಂಚಾರ ಇರುವುದಿಲ್ಲ ಎಂದು ತಿಳಿದುಬಂದಿದೆ.
ಪ್ರತಿಭಟನಾ ಮೆರವಣಿಗೆಯಲ್ಲಿ ಕನ್ನಡ ಒಕ್ಕೂಟದ ಪದಾಧಿಕಾರಿಗಳಾದ ಸಾ.ರಾ.ಗೋವಿಂದ್, ಕನ್ನಡ ಸೇನೆ ಕುಮಾರ್, ಪ್ರವೀಣ್ ಶೆಟ್ಟಿ, ಕರವೇ ಅಧ್ಯಕ್ಷ ಶಿವರಾಮೇಗೌಡ, ಗಿರೀಶ್ ಗೌಡ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.