ನವದೆಹಲಿ : ಅನಿವಾಸಿ ಭಾರತೀಯ ಉದ್ಯಮಿ ಲಾರ್ಡ್ ಸ್ವರಾಜ್ ಪಾಲ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ್ದು, ಎನ್.ಆರ್.ಐಗಳೊಂದಿಗೆ ಉತ್ತಮ ಸಂಪರ್ಕ ಸಾಧಿಸಲು ಮೋದಿ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬಡವರ ಅಭಿವೃದ್ಧಿಗಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸರಿಯಾದ ದಾರಿಯಲ್ಲಿ ಸಾಗುತ್ತಿದ್ದು, ದಿಟ್ಟ ನಿರ್ಧಾರಗಳನ್ನು ಕೈಗೊಳ್ಳುತ್ತಿದೆ ಎಂದು ಸ್ವರಾಜ್ ಪಾಲ್ ಹೇಳಿದ್ದಾರೆ. ಪ್ರಧಾನಿ ಮೋದಿ, ಸರಿಯಾದ ದಿಕ್ಕಿನಲ್ಲಿ ಭಾರತವನ್ನು ಮುನ್ನಡೆಸುತ್ತಿದ್ದಾರೆ. ಪ್ರಧಾನಿ ಮೋದಿ, ವಿಶ್ವಮಟ್ಟದಲ್ಲಿ ಭಾರತ ಹಾಗೂ ಭಾರತೀಯರ ಪ್ರತಿಷ್ಠೆ ಹೆಚ್ಚುವಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ಎನ್.ಆರ್.ಐ ಗಳ ದೃಷ್ಟಿಯಲ್ಲಿ, ಕಳೆದ 35 ವರ್ಷಗಳಲ್ಲಿ ನಮ್ಮ ಶಕ್ತಿಯನ್ನು ಗುರುತಿಸಿದ ಮೊದಲ ಪ್ರಧಾನಿ ಮೋದಿ ಎಂದು ಸ್ವರಾಜ್ ಅಭಿಪ್ರಾಯಪಟ್ಟಿದ್ದಾರೆ.
ನಮ್ಮ ಪ್ರಧಾನಿ ಉತ್ತಮ ವಿಚಾರಧಾರೆಗಳನ್ನು, ಕ್ರಿಯಾಶೀಲತೆಯನ್ನು ಹೊಂದಿದ್ದಾರೆ, ಶ್ರೀಮಂತರಿಗಿಂತಲೂ ಬಡವರಿಗಾಗಿ ಭಾರತ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಸರ್ಕಾರ ಅಸ್ಥಿತ್ವಕ್ಕೆ ಬಂದು ಒಂದು ತಿಂಗಳು, ಒಂದು ವರ್ಷಕ್ಕೆ ಕಾರ್ಯಕ್ಷಮತೆಯನ್ನು ಅಳೆಯುವುದು ಸಾಮಾನ್ಯವಾಗಿಬಿಟ್ಟಿದೆ. ಆದರೆ, ಒಂದು ವರ್ಷದಲ್ಲಿ ಯಾವುದೇ ಪವಾಡ ನಡೆಯಲು ಸಾಧ್ಯವಿಲ್ಲ. ಮೋದಿ ಸರ್ಕಾರ ಅಸ್ಥಿತ್ವಕ್ಕೆ ಬಂದಾಗಿನಿಂದಲೂ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಇದು ಒಳ್ಳೆಯ ಸೂಚನೆ ಎಂದು ಪಾಲ್ ಅಭಿಪ್ರಾಯಪಟ್ಟಿದ್ದಾರೆ.
ಲಾರ್ಡ್ ಸ್ವರಾಜ್ ಪಾಲ್ ಅವರು ಎನ್.ಡಿ.ಎ ಸರ್ಕಾರದ ಪ್ರಸಕ್ತ ಸಾಲಿನ ಬಜೆಟ್ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಭಾರತದ ಆರ್ಥಿಕ ವ್ಯವಸ್ಥೆಯನ್ನು ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ವಿತ್ತ ಸಚಿವ ಅರುಣ್ ಜೇಟ್ಲಿ ಸ್ಪಷ್ಟ ಹೆಜ್ಜೆಗಳನ್ನಿಟ್ಟಿರುವುದು ಈ ಬಜೆಟ್ ನಲ್ಲಿ ಸ್ಪಷ್ಟವಾಗಿದೆ ಎಂದು ಹೇಳಿದ್ದರು.