ನವದೆಹಲಿ : 'ಬಿಬಿಎಂಪಿ' ಚುನಾವಣೆ ಸಂಬಂಧ ಹೈಕೋರ್ಟ್ ದ್ವಿಸದಸ್ಯಪೀಠ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.
ಮೇ.31ರೊಳಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ನ ಏಕಸದಸ್ಯ ಪೀಠ ರಾಜ್ಯ ಸರ್ಕಾರಕ್ಕೆ ನೀಡಿದ್ದ ಆದೇಶವನ್ನು ಹೈಕೋರ್ಟ್ ನ ದ್ವಿಸದಸ್ಯಪೀಠ ರದ್ದುಗೊಳಿಸಿ, ಚುನಾವಣೆ ನಡೆಸಲು ಸರ್ಕಾರಕ್ಕೆ 6 ತಿಂಗಳ ಕಾಲಾವಕಾಶ ನೀಡಿತ್ತು. ಹೈಕೋರ್ಟ್ ದ್ವಿಸದಸ್ಯ ಪೀಠದ ತೀರ್ಪನ್ನು ಸುಪ್ರೀಂ ಕೋರ್ಟ್ ನಲ್ಲಿ ಪ್ರಶ್ನಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ಮೂರು ತಿಂಗಳೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
ಮುಖ್ಯ ನ್ಯಾಯಮೂರ್ತಿ ವಘೇಲಾ ಹಾಗೂ ನ್ಯಾಯಮೂರ್ತಿ ರಾಮಮನೋಹರ್ ರೆಡ್ಡಿ ನೇತೃತ್ವದ ವಿಭಾಗೀಯ ಪೀಠದ ತೀರ್ಪನ್ನು ಪ್ರಶ್ನಿಸಿ ರಾಜ್ಯ ಚುನಾ ವಣಾ ಆಯೋಗ ಹಾಗೂ ಬಿಬಿಎಂಪಿ ಮಾಜಿ ಸದಸ್ಯರಾದ ಸಿ.ಕೆ.ರಾಮಮೂರ್ತಿ, ಸೋಮಶೇಖರ್ ಮತ್ತಿತರರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.
ಮುಖ್ಯ ನ್ಯಾಯಮೂರ್ತಿ ಎಚ್.ಎಲ್.ದತ್ತು ನೇತೃತ್ವದ ಸರ್ವೋಚ್ಚ ನ್ಯಾಯಾಲಯದ ವಿಭಾಗೀಯ ಪೀಠ ಕಾರಣ ಕೇಳಿ ಕರ್ನಾಟಕ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿ ವಿಚಾರಣೆಯನ್ನು ಮೇ.5ಕ್ಕೆ ಮುಂದೂಡಿತ್ತು.
ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ವಕೀಲ ಕಪಿಲ್ ಸಿಬಲ್ ಚುನಾವಣೆ ನಡೆಸಿ ನಂತರ ವಿಭಜನೆ ಮಾಡುವುದಾಗಿ ಮನವಿ ಮಾಡಿಕೊಂಡರು. ಸದ್ಯ ಗ್ರಾಮ ಪಂಚಾಯ್ತಿ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಚುನಾವಣೆಗೆ ಕಾಲಾವಕಾಶ ನೀಡುವಂತೆ ಕೋರಿದರು. ಇದಕ್ಕೆ ಸಮ್ಮತಿ ವ್ಯಕ್ತಪಡಿಸಿದ ಸರ್ವೋಚ್ಚ ನ್ಯಾಯಾಲಯ ಮೂರು ತಿಂಗಳೊಳಗೆ ಚುನಾವಣೆ ನಡೆಸುವಂತೆ ಆದೇಶಿಸಿದೆ. ಈ ದಿನಾಂಕದಿಂದ ಮೂರು ತಿಂಗಳೊಳಗೆ ಬಿಬಿಎಂಪಿಗೆ ಚುನಾವಣೆ ನಡೆಸಲೇಬೇಕು ಎಂದು ಸರ್ವೋಚ್ಚ ನ್ಯಾಯಾಲಯ ಆದೇಶಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಸದ್ಯದಲ್ಲೇ ಪ್ರಕ್ರಿಯೆಗಳನ್ನು ಕೈಗೊಳ್ಳಬೇಕಾಗಿದೆ.