ವಿಶ್ವಸಂಸ್ಥೆ : ವಿಶ್ವಸಂಸ್ಥೆಯಲ್ಲಿ ಮಾನವ ಹಕ್ಕುಗಳ ಮೇಲಿನ ಚರ್ಚೆಯ ವೇಳೆ ಹಿಜ್ಬುಲ್ ಮುಜಾಹಿದೀನ್ ಕಮಾಂಡರ್ ಬುರ್ಹಾನ್ ವಾನಿ ಕಾಶ್ಮೀರಿ ನಾಯಕ ಎಂದಿರುವುದಕ್ಕೆ ಹಾಗೂ ಆತನ ಹತ್ಯೆಯ ವಿಷಯವನ್ನು ಪಾಕಿಸ್ಥಾನ ಪ್ರಸ್ತಾಪಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ವಿಶ್ವಸಂಸ್ಥೆಯಲ್ಲಿ ಮಾನವ ಹಕ್ಕುಗಳ ಕುರಿತಾಗಿ ನಡೆದಿದ್ದ ಚರ್ಚೆಯ ವೇಳೆ, ಪಾಕ್ ಪ್ರತಿನಿಧಿ ಮಲೀಹಾ ಲೋಧಿ ಅವರು ಭಾರತೀಯ ಸೇನೆ ಬರ್ಹಾನ್ ವನಿಯನ್ನು ಕಾನೂನು ಬಾಹಿರವಾಗಿ ಹತ್ಯೆ ಮಾಡಿದೆ. ಆತ ಕಾಶ್ಮೀರದ ರಾಜಕೀಯ ನಾಯಕ, ಆತನ ಹತ್ಯೆಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಹೇಳಿದ್ದರು.
ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ವಿಶ್ವಸಂಸ್ಥೆಯಲ್ಲಿನ ಭಾರತದ ಶಾಶ್ವತ ಪ್ರತಿನಿಧಿ ಸೈಯದ್ ಅಕ್ಬರುದ್ದೀನ್ ಅವರು ಅದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ, ಪಾಕಿಸ್ಥಾನವು ವಿಶ್ವಸಂಸ್ಥೆಯ ವೇದಿಕೆಯನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಹೇಳಿದರು.
ಪಾಕಿಸ್ಥಾನ ಭಯೋತ್ಪಾದನೆಯನ್ನೇ ತನ್ನ ಸರಕಾರಿ ನೀತಿಯನ್ನಾಗಿ ಮಾಡಿಕೊಳ್ಳುತ್ತಿದ್ದು, ಭಯೋತ್ಪಾದಕರನ್ನು ಪ್ರಶಂಸಿಸುವ ದೇಶವಾಗಿದೆ ಎಂದು ತಿರುಗೇಟು ನೀಡಿದ್ದಾರೆ.
ಈ ನಡುವೆ ಭಾರತ ಮತ್ತು ಪಾಕಿಸ್ತಾನ ನೇರವಾಗಿ ಮಾತುಕತೆ ನಡೆಸಲು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಬಾನ್ ಕಿ ಮೂನ್ ಆಹ್ವಾನ ನೀಡಿದ್ದಾರೆ. ಭಾರತ ಮತ್ತು ಪಾಕಿಸ್ತಾನ ಮಾತುಕತೆ ಮೂಲಕ ಸಮಸ್ಯೆಯನ್ನು ಪರಿಹರಿಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ.