ನವದೆಹಲಿ : 2014ರಲ್ಲಿ ಸೋಲುಕಂಡಿದ್ದ ಲೋಕಸಭಾ ಕ್ಷೇತ್ರಗಳನ್ನು ದತ್ತು ತೆಗೆದುಕೊಂಡು ಅಭಿವೃದ್ದಿ ಕೆಲಸಗಳಲ್ಲಿ ತೊಡಗುವಂತೆ ಎಲ್ಲ ರಾಜ್ಯಸಭಾ ಸದಸ್ಯರುಗಳಿಗೆ ಪ್ರಧಾನಿ ನರೇಂದ್ರ ಮೋದಿ ತಾಕೀತು ಮಾಡಿದ್ದಾರೆ.
ನವದೆಹಲಿಯಲ್ಲಿ ನಡೆದ ಬಿಜೆಪಿ ರಾಜ್ಯಸಭಾ ಸದಸ್ಯರುಗಳ ಸಭೆಯಲ್ಲಿ ಈ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕೇಂದ್ರ ಸರ್ಕಾರದ ಬಡವರ ಪರ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಮತ್ತು ಉತ್ತಮ ಆಡಳಿತ ನೀಡಲು ಪ್ರಮುಖ ಪಾತ್ರ ವಹಿಸಬೇಕೆಂದು ಕರೆ ನೀಡಿದರು.
ಪಕ್ಷವನ್ನು ಬೇರುಮಟ್ಟದಿಂದ ಬಲಗೊಳಿಸಬೇಕು. ಸರ್ಕಾರದ ಸಾಧನೆಗಳನ್ನು ಸಂಸತ್ತಿನಲ್ಲಿ ಪ್ರಮುಖವಾಗಿ ಪ್ರಸ್ತಾಪಿಸಬೇಕು ಮತ್ತು ಸಾಮಾಜಿಕ ಜಲ ತಾಣಗಳಲ್ಲಿ ಸಕ್ರಿಯವಾಗಿರಬೇಕು ಎಂದು ತಿಳಿಸಿದ್ದಾರೆ.
2014ರಲ್ಲಿ ಸೋಲನುಭವಿಸಿದ್ದ ಲೋಕಸಭಾ ಕ್ಷೇತ್ರಗಳ ಜವಾಬ್ದಾರಿ ತೆಗೆದುಕೊಂಡು ಲೋಕಸಭೆಯ ಪ್ರತಿನಿಧಿಯಂತೆ ಅದನ್ನು ಪೋಷಿಸಬೇಕು. ಇದರಿಂದ ಮುಂದಿನ ಚುನಾವಣೆಗಳಲ್ಲಿ ಪಕ್ಷದ ಗೆಲುವಿಗೆ ನೆರವಾಗಲಿದೆ ಎಂದು ಪ್ರಧಾನಿ ಆದೇಶದ ಮೇರೆಗೆ ಅಮಿತ್ ಶಾ ಸಭೆಯಲ್ಲಿ ಸೂಚಿಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಲೋಕಸಭಾ ಕ್ಷೇತ್ರವನ್ನು ದತ್ತು ತೆಗೆದುಕೊಳ್ಳಲು ರಾಜ್ಯಸಭಾ ಸದಸ್ಯರುಗಳಿಗೆ ಹಿರಿಯ ಸಚಿವರುಗಳಾದ ಅರುಣ್ ಜೇಟ್ಲಿ, ಎಂ.ವೆಂಕಯ್ಯನಾಯ್ಡು ಮತ್ತು ಮನೋಹರ್ ಪರಿಕ್ಕರ್ ನೆರವಾಗಲಿದ್ದಾರೆ ಎನ್ನಲಾಗಿದೆ. ಈ ಮೂಲಕ 2019ರ ಲೋಕಸಭಾ ಚುನಾವಣೆಗೆ ಬಿಜೆಪಿ ಈಗಿನಿಂದಲೇ ತಯಾರಿ ನಡೆಸಿದ್ದು, ಚುನಾವಣೆಯ ಗೆಲುವಿಗಾಗಿ ರಣತಂತ್ರ ರೂಪಿಸಿದೆ.