ಬೆಂಗಳೂರು : ಕಾವೇರಿ ನದಿ ನೀರಿನ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯಕ್ಕೆ ಮತ್ತೆ ಅನ್ಯಾಯವಾಗಿರುವುದರಿಂದ ಒಂದೆಡೆ ಜನತೆ ಬೇಸರಗೊಂಡಿದ್ದರೆ ಮತ್ತೊಂದೆಡೆ ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆಸಲಾಗಿರುವುದರಿಂದ ರಾಜ್ಯದಲ್ಲಿ ಕನ್ನಡಿಗರ ಆಕ್ರೋಶ ಭುಗಿಲೆದ್ದಿದೆ. ಬೆಂಗಳೂರು, ಮೈಸೂರು, ಚಾಮರಾಜನಗರ, ಮಂಡ್ಯ, ಚಿತ್ರದುರ್ಗ, ಬೆಳಗಾವಿ, ಹುಬ್ಬಳ್ಳಿ ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.
ಉಭಯ ರಾಜ್ಯಗಳಲ್ಲಿ ಪ್ರತಿಭಟನೆಗಳು ಹೆಚ್ಚಿದ ಕಾರಣ ತಮಿಳುನಾಡಿಗೆ ಹೋಗುವ ಮತ್ತು ಅಲ್ಲಿಂದ ಬರುವ ಬಸ್ಗಳ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಬೆಂಗಳೂರಿನಲ್ಲಿ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿ ಹಲವು ಬಸ್ಗಳನ್ನು ಜಖಂಗೊಳಿಸಿದ್ದಾರೆ.ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಯೋಗಿಸಿದ್ದಾರೆ. ಕೆ.ಆರ್.ಮಾರುಕಟ್ಟೆ, ಮೆಜೆಸ್ಟಿಕ್, ಯಶವಂತಪುರ, ಎಪಿಎಂಸಿ ಸೇರಿದಂತೆ ಹಲವೆಡೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ.
ಸುಪ್ರೀಂ ಕೋರ್ಟ್ ನಲ್ಲಿ ಮಧ್ಯಂತರ ಅರ್ಜಿ ವಿಚಾರಣೆ ತೀರ್ಪು ಹೊರ ಬೀಳುತ್ತಿದ್ದಂತೆಯೇ ಬೆಂಗಳೂರು ಹಾಗೂ ಮೈಸೂರಿನಲ್ಲಿ ಕನ್ನಡಪರ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು,ಹಲವೆಡೆ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಶಾಂತಿ ಕಾಪಾಡುವಂತೆ ಬೆಂಗಳೂರು ಹಾಗೂ ಮೈಸೂರಿನ ಹಿರಿಯ ಪೊಲೀಸ್ ಅಧಿಕಾರಿಗಳು ಮನವಿ ಮಾಡಿದ್ದಾರೆ.