ಬೆಂಗಳೂರು : ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಮೂರನೇ ಹಂತದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ವಿಧಾನ ಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಖಾತೆ ಸಚಿವ ಆರ್. ವಿ ದೇಶಪಾಂಡೆ ಅವರು ರಸ್ತೆ ಅಭಿವೃದ್ಧಿ ಕಾಮಗಾರಿಗಳ ಚಾಲನಾ ಸಮಾರಂಭದಲ್ಲಿ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಯೋಜನೆ ಕುರಿತ ಕಿರು ಹೊತ್ತಿಗೆಯನ್ನು ಬಿಡುಗಡೆ ಮಾಡಿ ಮಾತನಾಡಿ ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಬಹಳಷ್ಟು ರಸ್ತೆ ಕಾಮಗಾರಿಗಳು ನಡೆದಿವೆ. ಇಂತಹ ರಸ್ತೆ ನಿರ್ಮಾಣದಿಂದ ರಾಜ್ಯದಲ್ಲಿ ಆರೋಗ್ಯ, ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸರ್ಕಾರದ ಕಾರ್ಯಗಳು ಸುಲಲಿತವಾಗಿ ನಡೆಯಲಿವೆ. ಗುಣಮಟ್ಟದ ಕಾರ್ಯ ನಿರ್ವಹಿಸುವ ಮೂಲಕ ಇಲಾಖೆಯ ಅಧಿಕಾರಿಗಳು ರಾಜ್ಯ ಸರ್ಕಾರಕ್ಕೆ ಒಳ್ಳೆಯ ಹೆಸರು ತರಲಿ ಎಂದು ಅವರು ಆಶಿಸಿದರು.
ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಹೆಚ್. ಆಂಜನೇಯ ಅವರು ಮಾತನಾಡಿ ಇಲಾಖೆಯಿಂದ ಹೊಸ ರಸ್ತೆ ನಿರ್ಮಾಣ, ರಸ್ತೆ ಅಗಲೀಕರಣ, ಸೇತುವೆ ಮತ್ತು ಸಂಪರ್ಕ ರಸ್ತೆ ನಿರ್ಮಾಣದ ಮೂಲಕ ಸಮರ್ಥ ನಿರ್ವಹಣೆ ನಡೆದಿದೆ. ರಾಜ್ಯ ಸರ್ಕಾರವು ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಿದೆ. ಅದೇ ರೀತಿ ರಾಷ್ಟ್ರ ಹಾಗೂ ರಾಜ್ಯ ಹೆದ್ದಾರಿಗಳನ್ನು ಸಂಪರ್ಕಿಸುವ ರಸ್ತೆಗಳನ್ನು ನಿರ್ಮಿಸುವ ಕೊರತೆ ನೀಗುವಲ್ಲಿ ರಾಜ್ಯ ಸರ್ಕಾರ ದಕ್ಷ, ಪ್ರಾಮಾಣಿಕ ಹಾಗೂ ಗುಣಮಟ್ಟದ ಕಾರ್ಯ ನಿರ್ವಹಣೆ ಮಾಡುತ್ತಿದೆ ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹೆಚ್. ಸಿ. ಮಹದೇವಪ್ಪ ಅವರು ರಸ್ತೆಗಳ ನಿರ್ಮಾಣದ ಮೂಲಕ ರಾಜ್ಯ ಸರ್ಕಾರವು ಸಂಪತ್ತನ್ನು ಸೃಷ್ಟಿಸುವ ಜನರನ್ನು ಬೆಸೆಯುವ, ಆರ್ಥಿಕ ಮತ್ತು ಔದ್ಯೋಗಿಕ ಚಟುವಟಿಕೆಗಳನ್ನು ಅಭಿವೃದ್ಧಿ ಪಡಿಸುವ ಕಾರ್ಯ ರಾಜ್ಯ ಸರ್ಕಾರ ಮಾಡುತ್ತಿದೆ. ಇಲಾಖೆಯ ಅಧಿಕಾರಿಗಳು ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಳ್ಳುವ, ವೃತ್ತಿ ಕೌಶಲ್ಯದಲ್ಲಿ ತಾಂತ್ರಿಕ ಹಾಗೂ ಗುಣಮಟ್ಟಕ್ಕೆ ಆದ್ಯ ನೀಡಿ ಸುಧಾರಣೆ ಮಾಡುತ್ತಿದೆ. ಇಲಾಖೆಯ ಅಧಿಕಾರಿಗಳ ಕಾರ್ಯದಿಂದ ರಾಷ್ಟ್ರಮಟ್ಟದ ಎರಡು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಲ್ಲದೆ, ಇಂಜಿನಿಯರ್ ಸಂಘದ ಪ್ರಮುಖ ಬೇಡಿಕೆಯಂತೆ ಸರ್ ಎಂ. ವಿಶ್ವೇಶ್ವರಯ್ಯನವರ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಿ ನೀಡಲು ಅರಂಭಿಸಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ 24,226 ಕಿ.ಮೀ ಉದ್ದದ ರಸ್ತೆ ಸಂಪರ್ಕ ಜಾಲವನ್ನು ಅಭಿವೃದ್ಧಿ ಹಾಗೂ ಸುಧಾರಣೆ ಮಾಡಲು ಯೋಜನೆ ರೂಪಿಸಲಾಗಿದೆ. ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಮೊದಲ ಹಂತದಲ್ಲಿ 3390 ಕಿ. ಮೀ ಉದ್ದದ ರಸ್ತೆಯನ್ನು 1666 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಲಾಗಿದೆ.
ಅಂತೆಯೇ, ಎರಡನೇ ಹಂತದಲ್ಲಿ 3134 ಕಿ. ಮೀ ಉದ್ದದ ರಸ್ತೆಯನ್ನು 1822 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಿ ಒಟ್ಟಾರೆ 6524 ಕಿ. ಮೀ ಉದ್ದದ ರಸ್ತೆಯನ್ನು 3488 ಕೋಟಿ ರೂ ಮೊತ್ತದಲ್ಲಿ ಪೂರ್ಣಗೊಳಿಸಲಾಗಿದೆ ಎಂದು ಮಹದೇವಪ್ಪ ಅವರು ಹೇಳಿದರು.
ಮೂರನೇ ಹಂತದ ಅಭಿವೃದ್ಧಿ ಯೋಜನೆಯಲ್ಲಿ 4315 ಕಿ. ಮೀ ರಸ್ತೆಯನ್ನು 3500 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲು ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ಇದರಲ್ಲಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ 1400 ಕಿ. ಮೀ. ರಸ್ತೆಯನ್ನು 1150 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲು ಅನುದಾನ ನಿಗಧಿ ಪಡಿಸಲಾಗಿದೆ ಎಂದು ಸಚಿವರು ವಿವರಿಸಿದರು.
ಕಳೆದ ಮೂರು ವರ್ಷಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ ಹದಿನೇಳು ಇಂಜಿನಿಯರ್ಗಳಿಗೆ ಸರ್. ಎಂ. ವಿಶ್ವೇಶ್ವರಯ್ಯ ಹೆಸರಿನಲ್ಲಿ ಸ್ಥಾಪಿಸಿರುವ ಪ್ರಶಸ್ತಿಗಳನ್ನು ಸಚಿವರುಗಳು ಪ್ರದಾನ ಮಾಡಿದರು.